ಉಡುಪಿ: ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆ-ಉಡುಪಿಯಲ್ಲಿ ಭದ್ರತೆ ಹೆಚ್ಚಳ
Mon, Jan 20 2020 07:41:57 PM
ಉಡುಪಿ, ಜ 20 (DaijiworldNews/SM): ಮಂಗಳೂರು ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ಇರುವ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಡುಪಿ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣದಲ್ಲಿ ಬಿಗಿ ಪೋಲಿಸ್ ಭದ್ರತೆ ಕೈಗೊಳ್ಳಲಾಗಿದೆ.
ಶಂಕಿತ ವಸ್ತುಗಳು, ಶಂಕಿತ ವ್ಯಕ್ತಿಗಳು ಕಂಡು ಬಂದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಇನ್ನು ಯಾವುದೇ ಶಂಕಿತ ವಸ್ತುಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಈಗಾಗಲೇ ಉಡುಪಿ ರೈಲ್ವೇ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
ಇನ್ನು ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿ ವಿಮಾನ ನಿಲ್ದಾಣ ಹಾಗೂ ಮಂಗಳೂರು ನಗರ ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಬಳಿಕ ತುರ್ತು ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರೀಯ ದಳದವರ ಸಹಾಯದಿಂದ ಬಾಂಬನ್ನು ಕೆಂಜಾರು ಮೈದಾನಕ್ಕೆ ಸ್ಥಳಾಂತರ ಮಾಡಿದ್ದಾರೆ. ಹಾಗೂ ಸಂಜೆ ವೇಳೆಗೆ ಮೈದಾನದಲ್ಲಿ ಬ್ಲಾಸ್ಟ್ ಮಾಡುವ ಮೂಲಕ ಶಂಕಿತರ ಕಾರ್ಯ ವಿಫಲಗೊಳಿಸಿದ್ದಾರೆ. ಆ ಮೂಲಕ ಮಂಗಳೂರಿನ ಜನತೆಯಲ್ಲಿ ಎದುರಾಗಿದ್ದ ಆತಂಕ ದೂರವಾಗಿದೆ.