ಮಂಗಳೂರು, ಸೆ 11 (DaijiworldNews/PY): ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು, ಸೆ.10ರ ಗುರುವಾರ ಸಂಜೆ ಆರಂಭಗೊಂಡಿದ್ದು, ಶುಕ್ರವಾರವೂ ಮಳೆ ಮುಂದುವರೆದಿದೆ.
ನಗರದಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ಮಳೆಯಿಂದ ಕೃತಕ ಪ್ರವಾಹ ಉಂಟಾಗಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಕೊಟ್ಟಾರ, ಅಕೆ, ಕೊಟ್ಟಾರ ಚೌಕಿ, ನಂತೂರು, ಪಂಪ್ವೆಲ್, ಪಡೀಲ್, ಬರ್ಕೆ ಹಾಗೂ ಇತರ ಪ್ರದೇಶಗಳಲ್ಲಿ ಹಲವಾರು ಮನೆಗಳಿಗೆ ಹಾಗೂ ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ. ಅಲ್ಲದೇ, ವಾಹನ, ಜನರ ಸಂಚಾರಕ್ಕೂ ತೊಂದರೆಯಾಗಿದೆ.
ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಗುರುವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು.
ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಅವಧಿಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಕರಾವಳಿಯಲ್ಲಿ ಸೆಪ್ಟೆಂಬರ್ 11 ಹಾಗೂ 12ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸೆಪ್ಟೆಂಬರ್ 13ರವರೆಗೆ ಎಚ್ಚರಿಕೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 11,12 ಹಾಗೂ 13ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.