ಕಾಪು, ಸೆ 17 (DaijiworldNews/PY): ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಭಾರಿ ಯಶ್ಪಾಲ್ ಎ. ಸುವರ್ಣ ಗೋ-ಸಂರಕ್ಷಣೆಗೆ ವಿಶೇಷ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗೋ ಸಂರಕ್ಷಣೆ ಮತ್ತು ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿರುವ ಮೋದಿಯವರ ಜನ್ಮದಿನದಂದೇ ಪೇಜಾವರ ಮಠದ ಶ್ರಿ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ 25 ಗೋವುಗಳನ್ನು ಗುರುವಾರ ದತ್ತು ಸ್ವೀಕರಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಗೋವುಗಳ ದತ್ತು ಸ್ವೀಕಾರಕ್ಕೆ ಸಾರ್ವಜನಿಕರಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರೀವಿಶ್ವೇಶತೀರ್ಥ ಗೋರಕ್ಷ ಬಳಗ ಸಂಸ್ಥೆಯ ಮೂಲಕ ನರೇಂದ್ರ ಮೋದಿ ಗೋವು ದತ್ತು ಅಭಿಯಾನ ನಡೆಸುವ ವಿಶೇಷ ಯೋಜನೆ ರೂಪಿಸಲಾಗಿದೆ.
ಗೋಶಾಲೆಗಳನ್ನು ನಿರ್ವಹಿಸುತ್ತಿರುವ ಸಂಸ್ಥೆಗಳು ಕೊರೊನಾ ಸಂದರ್ಭದಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನದ ಮೂಲಕ ಆರ್ಥಿಕ ಸಹಾಯ ಒದಗಿಸುವ ಜೊತೆ ಜೊತೆಗೆ, ಗೋಮಾತೆಯ ಸಂರಕ್ಷಣೆಯ ಸಂಕಲ್ಪದೊಂದಿಗೆ ಗೋವುಗಳನ್ನು ದತ್ತು ಸ್ವೀಕರಿಸುವ ಮೂಲಕ ಗೋಶಾಲೆಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಗೋವುಗಳನ್ನು ದತ್ತು ಸ್ವೀಕರಿಸುವತ್ತ ದಾನಿಗಳನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಅಭಿಯಾನ ರೂಪಿಸಲಾಗಿದೆ.
ದೇಶದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿ ಪೂಜನೀಯ ಗೋಮಾತೆಯ ಸಂರಕ್ಷಣೆಯತ್ತ ಅಳಿಲು ಸೇವೆ ನೀಡುವ ಉದ್ದೇಶದಿಂದ ರೂಪಿಸಿರುವ ಈ ಅಭಿಯಾನದಲ್ಲಿ ನರೇಂದ್ರ ಮೋದಿಯವರ ಅಭಿಮಾನಿಗಳು, ಸಾರ್ವಜನಿಕರು ಕೈಜೋಡಿಸಿ ಯಶಸ್ವಿಯಾಗಿಸುವಂತೆ ಯಶ್ಪಾಲ್ ಸುವರ್ಣ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನೀಲಾವರ ಗೋಶಾಲೆಯ ಪ್ರೇರಕಶಕ್ತಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಗೋವುಗಳನ್ನು ದತ್ತು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ತಮ್ಮ ಈ ಕಾರ್ಯ ಇತರರಿಗೆ ಪ್ರೇರಣೆಯಾಗಲಿ, ಗೋ ಸಂತತಿಯ ರಕ್ಷಣೆಗೆ ತಮ್ಮ ಸೇವೆ ನಿರಂತರವಾಗಿರಲಿ ಎಂದು ಹಾರೈಸಿ ಅನುಗ್ರಹಿಸಿದರು.
ವಾಸುದೇವ ಭಟ್ ಪೆರಂಪಳ್ಳಿ, ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ ಹೆರ್ಗ, ಗೋವಿಗಾಗಿ ಮೇವು ಅಭಿಯಾನದ ಸಂಚಾಲಕರಾದ ಪೃಥ್ವಿರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.