ಮಂಗಳೂರು, ಅ. 05 (DaijiworldNews/MB) : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ವಿವಿಧ ಕಡೆಗಳಲ್ಲಿ ಸಿಸಿಬಿ ದಾಳಿ ನಡೆಸಿರುವ ರಾಜಕೀಯ ಪ್ರೇರಿತ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು, ರಾಜಕೀಯ ವಿರೋಧಿಗಳನ್ನು ಹಣಿಯಲು ಸಿಬಿಐ ಅನ್ನು ಬಳಸುತ್ತಿತ್ತೆಂದು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ ಎಂದು ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ ಸಿಬಿಐ ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!!'' ಎಂದು ಹೇಳಿದ್ದಾರೆ.
''ಡಿಕೆಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ?'' ಎಂದು ಪ್ರಶ್ನಿಸಿದ್ದಾರೆ.
''ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ ಡಿ ಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ!'' ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಇಂದು ಬೆಳಗ್ಗೆ ಸಿಬಿಐ ದಾಳಿಯನ್ನು ಹಲವು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು ಯಾವುದೇ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.