ಮಂಗಳೂರು, ಅ. 14 (DaijiworldNews/PY): ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಸೇವಾ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ್ ಪೈ ಬಿ ಹೇಳಿದ್ದಾರೆ.
ಇಂದು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ ಕೊರೊನಾ ಜನಾಂದೋಲನ ಕಾರ್ಯಕ್ರಮದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಸಂಚಾರಿ ಆಟೋಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು,
ಸರ್ಕಾರವು ಕೊರೊನಾ ಬಗ್ಗೆ ಮಾರ್ಗಸೂಚಿಗಳನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಸೋಂಕು ತಡೆಗಟ್ಟಲು ಸರಳ ಮಾರ್ಗಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಪದೇಪದೇ ಕೈ ತೊಳೆಯುವುದು, ಅಸ್ವಚ್ಚತಾ ಸ್ಥಳಗಳನ್ನು ಮುಟ್ಟುದಿರುವುದು, ಸೇರಿದಂತೆ ಮತ್ತಿತರೆ ಸೂಚನೆಗಳನ್ನು ಪಾಲಿಸಿದಲ್ಲಿ ಕೊರೊನಾ ಸೋಂಕಿನಿಂದ ದೂರವಾಗಲು ಸಾಧ್ಯವಾಗುತ್ತದೆ ಎಂದರು.
ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಬಗ್ಗೆ ಸುಳ್ಳು ಸುದ್ದಿಗಳು ಹರಡುತ್ತಿವೆ. ಇವುಗಳ ಬಗ್ಗೆ ಜನರು ಕಿವಿಗೊಡದೆ ಸರ್ಕಾರ ಸೂಚಿಸುವ ನಿಯಮಗಳನ್ನು ಚಾಚ್ಚು ತಪ್ಪದೆ ಪಾಲಿಸಬೇಕೆಂದು ಸಾರ್ವಜನಿಕರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು ನ್ಯಾಯಾಧೀಶರು ಸಾರ್ವಜನಿಕರು, ಅಧಿಕಾರಿಗಳು ಹಾಗೂ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಪ್ರತಿಜ್ಞಾ ವಿಧಿಯನ್ನು ತಪ್ಪದೇ ಪಾಲಿಸಬೇಕು ಅದನ್ನು ಇತರರಿಗೂ ಪಾಲಿಸುವಂತೆ ತಿಳಿ ಹೇಳಬೇಕು ಎಂದರು.
ವಕೀಲ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಅರೆಕಾಲಿಕ ಸ್ವಯಂ ಸೇವಕರು ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎ.ಜಿ, ವಕೀಲ ಸಂಘದ ಅಧ್ಯಕ್ಷ ನರಸಿಂಹ ಹೆಗ್ಡೆ, ಸಿಬ್ಬಂದಿಗಳು ಮತ್ತಿತರು ಉಪಸ್ಥಿತರಿದ್ದರು.