ಬಂಟ್ವಾಳ, ನ. 10 (DaijiworldNews/SM): ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮವೊಂದರಲ್ಲಿ ಶರತ್ ಮಡಿವಾಳ ಕೊಲೆ ಮಾಡಿದವರು ರಮಾನಾಥ ರೈ ಎಂದು ನೇರ ಆರೋಪ ಮಾಡಿ ಸಂಘರ್ಷ ಉಂಟಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಂಟ್ವಾಳ ಕಾಂಗ್ರೆಸ್ ಘಟಕ ಒತ್ತಾಯಿಸಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ಅವರಿಗೆ ಮನವಿ ನೀಡಿದ್ದಾರೆ. ಇನ್ನು ಭಾಷಣದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಕಾರಣರಾದ ಆರೋಪಿತರನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಒತ್ತಾಯಿಸಿದ್ದಾರೆ ಬಳಿಕ ಇದರಿಂದ ಮಾಜಿ ಸಚಿವ ರಮಾನಾಥ ರೈ ಅವರ ಘನತೆಗೆ ಧಕ್ಕೆ ಉಂಟಾಗಿದ್ದಲ್ಲದೆ ರೈ ಅವರಿಗೆ ಜೀವ ಭಯ ಇರುತ್ತದೆ ಎಂದು ಅವರು ಹೇಳಿದ್ದಾರೆ.
ಶರತ್ ಮಡಿವಾಳ ಅವರ ಕೊಲೆ ಆರೋಪಿಗಳನ್ನು ಪೋಲೀಸರು ಬಂಧಿಸಿ ಬಳಿಕ ಜಾಮೀನು ಮೇಲೆ ಬಿಡುಗಡೆ ಗೊಂಡು ಕೊಲೆ ಪ್ರಕರಣ ತನಿಖೆಯಲ್ಲಿದೆ, ಆದರೆ ಪ್ರಸ್ತುತ ಪ್ರಕರಣದಲ್ಲಿ ಮಾಜಿ ಸಚಿವರನ್ನು ಆರೋಪಿ ಸ್ಥಾನದಲ್ಲಿ ಹರಿಕೃಷ್ಣ ಬಂಟ್ವಾಳ್ ಬಿಂಬಿಸುವ ಮೂಲಕ ಘನತೆಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವರ ಮೇಲೆ ಕೊಲೆ ಆರೋಪ ಮಾಡಿದ ಹರಿಕೃಷ್ಣ ಬಂಟ್ವಾಳ್ ಮತ್ತು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯ ಒದಗಿಸುವಂತೆ ಬೇಬಿ ಕುಂದರ್ ಹಾಗೂ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೂಲಕ ನಗರ ಪೋಲೀಸ್ ಠಾಣೆಗೆ ಆಗಮಿಸಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಆಧ್ಯಕ್ಷ ಸುದೀಪ್ ಶೆಟ್ಟಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ತಾ.ಪಂ.ಅಧ್ಯಕ್ಷ ಚಂದ್ರ ಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಪುರಸಭಾ ಅಧ್ಯಕ್ಷ ಶರೀಫ್, ಉಪಾಧ್ಯಕ್ಷೆ ಜೆಸಿಂತ, ಪ್ರಮುಖರಾದ ಮಾಯಿಲಪ್ಪ ಸಾಲ್ಯಾನ್,ಗಂಗಾದರ ಪೂಜಾರಿ, ವೆಂಕಪ್ಪ ಪೂಜಾರಿ, ಮಹಮ್ಮದ್ ನಂದಾವರ, ಸಿದ್ದೀಕ್ ಗುಡ್ಡೆಯಂಗಡಿ, ಜನಾರ್ಧನ ಚೆಂಡ್ತಿಮಾರ್, ಸುದರ್ಶನ್ ಜೈನ್ ಮತ್ತಿತರರು ಉಪಸ್ಥಿತರಿದ್ದರು