ಕಾಸರಗೋಡು, ಡಿ. 15 (DaijiworldNews/SM): ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದ್ದು, ತನಿಖಾ ತಂಡ ಕಾಸರಗೋಡಿಗೆ ಆಗಮಿಸಿ ಮಾಹಿತಿ ಕಲೆ ಹಾಕಿದೆ.
ಕೃತ್ಯ ನಡೆದ ಸ್ಥಳಕ್ಕೆ ಸಿಬಿಐ ಮುಖ್ಯಸ್ಥ ನಂದಕುಮಾರ್ ನೇತೃತ್ವದ ತಂಡವು ಭೇಟಿ ನೀಡಿದ್ದು, ಕುಟುಂಬಸ್ಥರಿಂದ ಮಾಹಿತಿ ಪಡೆದಿದೆ. 2019ರ ಫೆಬ್ರವರಿ 17ರಂದು ಪೆರಿಯದಲ್ಲಿ ಕೊಲೆ ನಡೆದಿತ್ತು. ಆರಂಭದಲ್ಲಿ ಕಾಸರಗೋಡು ಪೊಲೀಸರು ಬಳಿಕ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ನಡೆಸಿದ್ದರು. ಸಿಪಿಎಂ ಸ್ಥಳೀಯ ಮುಖಂಡ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿತ್ತು.
ಆದರೆ ಕೃತ್ಯದಲ್ಲಿ ಉನ್ನತ ನಾಯಕರ ಕೈವಾಡ ಇದ್ದು, ಇವರನ್ನು ಸಂರಕ್ಷಿಸಲು ರಾಜ್ಯ ಸರಕಾರ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದ್ದ ಕುಟುಂಬಸ್ಥರು ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿತ್ತು.
ಇದರ ವಿರುದ್ದ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಇದರಿಂದ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡಿದೆ.