ಉಡುಪಿ, ಡಿ. 16 (DaijiworldNews/SM): ಕಳೆದ ಹಲವಾರು ಸಮಯದಿಂದ ನಿರಂತರ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಸಂತೋಷ್ ಕುಮಾರ್ ಬೈರಂಪಳ್ಳಿ ಅವರನ್ನು ಪಕ್ಷದ ಸಾಮಾನ್ಯ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸಂತೋಷ್ ಕುಮಾರ್ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷರಾಗಿದ್ದು ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಇತ್ತೀಚಿಗೆ ಗ್ರಾಮ ಪಂಚಾಯತ್ ಚುನಾವಣೆಗೆ ಬೈರಂಪಳ್ಳಿ ಪಂಚಾಯತ್ ನಿಂದ ಸ್ವತಂತ್ರವಾಗಿ ಸ್ಪರ್ಧಿಸಲು ನಾಮಪತ್ರ ಕೂಡ ಸಲ್ಲಿಸಿದ್ದರು.
ಕೆಲವು ದಿನಗಳ ಹಿಂದೆಯಷ್ಟೇ ವಿಶ್ವ ಹಿಂದೂ ಪರಿಷತ್, ಮಂಗಳೂರಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿಶ್ವ ಹಿಂದೂ ಪರಿಷತ್ತಿನ ಜವಾಬ್ದಾರಿಯಿಂದ ಮುಕ್ತ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದ ಬೇಸರಗೊಂಡು ಬೈರಂಪಳ್ಳಿ ಪಂಚಾಯತ್ ನಲ್ಲಿ ನಡೆಯುವ ಭ್ರಷ್ಟಾಚಾರವನ್ನು ಮುಕ್ತ ಮಾಡಲು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುವ ನಿರ್ಧಾರಕ್ಕೆ ಬಂದಿದ್ದರು. ಈ ಬೆಳವಣಿಗೆಯ ಬಗ್ಗೆ ಪತ್ರಿಕಾಗೋಷ್ಠಿಯನ್ನು ಕೂಡ ನಡೆಸಿದ್ದರು.
ಇದೀಗ ಬಿಜೆಪಿ ಜಿಲ್ಲಾಧ್ಯಕ್ಷರು ಸುರೇಶ್ ನಾಯಕ್ ಅವರು, ಸಂತೋಷ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.