ಕಾರ್ಕಳ,ಡಿ.31(DaijiworldNews/HR): "ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಥಾನ ಪಡೆದಿರುವುದು ನಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸಿದೆ, ಹಾಗಾಗಿ ಎಲ್ಲರೂ ಒಗ್ಗಟ್ಟಾಗಿ ಎಲ್ಲಾ ಗ್ರಾಮ ಪಂಚಾಯತ್ಗಳ ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಮಾಣಿಕವಾಗಿ ಮಾಡಿ ಮತದಾರರ ಋಣ ತೀರಿಸುವ ಕೆಲಸ ಮಾಡೋಣ ಮತ್ತು ಪಕ್ಷದ ಬಲವರ್ಧನೆಗೆ ಮತ್ತಷ್ಟು ಶ್ರಮ ವಹಿಸೋಣ" ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭೂತಪೂರ್ವ ಗೆಲುವನ್ನು ಸಂಭ್ರಮಿಸುವ ಸಲುವಾಗಿ ಕಾರ್ಕಳದ ಶಾಸಕರ ಕಛೇರಿ ವಿಕಾಸದಲ್ಲಿ ಸರಳ ರೀತಿಯಲ್ಲಿ ಆಚರಿಸಲಾದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, "ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 34 ಗ್ರಾಮ ಪಂಚಾಯತ್ಗಳ ಪೈಕಿ 30 ಗ್ರಾಮ ಪಂಚಾಯತ್ಗಳಲ್ಲಿ ಆಡಳಿತ ನಡೆಸಲು ಅನುಕೂಲವಾಗುವಷ್ಟು ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದು ಒಟ್ಟು 492 ಸ್ಥಾನಗಳಲ್ಲಿ 362 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ" ಎಂದರು.
ಕಾರ್ಕಳ ಕ್ಷೇತ್ರದಲ್ಲಿ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿ ಅತೀ ಹೆಚ್ಚು ಸ್ಥಾನ ಗಳಿಸಿರುವ ದಾಖಲೆ ಇದಾಗಿದೆ ಎಂದು ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆಯವರು ತಿಳಿಸಿದ್ದಾರೆ.
ಮುಖಂಡ ಎಂ.ಕೆ ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ರೇಶ್ಮಾ ಉದಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ, ದಯಾನಂದ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.