ಮಂಗಳೂರು, ಫೆ.16 (DaijiworldNews/MB) : ಜಿಲ್ಲಾಡಳಿತ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಯು ರ್ಯಾಗಿಂಗ್ ಮುಕ್ತ ಅಭಿಯಾನವನ್ನು ನಡೆಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿ, ರೂಪಾ ಜೆ. ಎಂ. ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಲಾಗಿದೆ.
ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿಗಳಲ್ಲಿ ರ್ಯಾಗಿಂಗ್ ಪ್ರಕರಣ ದಾಖಲಾಗಿದ್ದು ರ್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳ ಬಂಧನವಾಗಿದೆ. ಈ ರ್ಯಾಗಿಂಗ್ ಪ್ರಕರಣವು ಜಿಲ್ಲಾಡಳಿತ ಹಾಗೂ ರ್ಯಾಗಿಂಗ್ ನಡೆಸುವ ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಕರೆಗಂಟೆ ನೀಡಿದೆಯಾದರೂ, ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಹೊರ ರಾಜ್ಯ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ನಗರದ ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಾರೆ. ಈ ವಿದ್ಯಾರ್ಥಿಗಳು ತಮ್ಮ ಹೆತ್ತವರಿಂದ ದೂರವಿದ್ದು ನಗರದಲ್ಲೇ ಹಾಸ್ಟೇಲುಗಳಲ್ಲಿ ನೆಲೆಸಿ ವಿದ್ಯಾರ್ಜನೆ ಮಾಡುತ್ತಾರೆ. ರ್ಯಾಗಿಂಗ್ ಪ್ರಕರಣವು ಇಂತಹ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಭಯದ ವಾತಾವರಣ ನಿರ್ಮಿಸಿದೆ ಎಂದು ಎಸ್ಎಫ್ಐ ಹೇಳಿದೆ.
ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ರ್ಯಾಗಿಂಗ್ ಮುಕ್ತ ಸಮಿತಿಯಿದೆಯಾದರೂ ಕೇವಲ ಹೆಸರಿಗೆ ಮಾತ್ರ ಇರುವಂತಾಗಿದೆ. ಇನ್ನೂ ಕೆಲವು ಶಾಲಾ-ಕಾಲೇಜುಗಳಲ್ಲಿ ರ್ಯಾಗಿಂಗ್ ಮುಕ್ತ ಸಮಿತಿಯೇ ರಚನೆಯಾಗಿಲ್ಲ. ವಿದ್ಯಾಸಂಸ್ಥೆಗಳಲ್ಲಿ ರ್ಯಾಗಿಂಗ್ ಮೊದಲಾದ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳು ನಡೆಯದಂತೆ ಸಮಿತಿಯನ್ನು ರಚಿಸಿ ಕಾರ್ಯನಿರ್ವಹಿಸಬೇಕಾಗಿದೆ. ಯಾವುದೇ ವಿದ್ಯಾರ್ಥಿಗಳು ಕಿರುಕುಳವನ್ನು ಎದುರಿಸುತ್ತಿದ್ದರೆ ಆತಂಕಕ್ಕೆ ಒಳಪಡದೆ, ತಮ್ಮ ವಿದ್ಯಾಸಂಸ್ಥೆಯ ಸಂಬಂಧ ಪಟ್ಟ ಸಮಿತಿಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವಂಥಹ ಕಾರ್ಯವನ್ನು ಸಮಿತಿಯು ನಿರ್ವಹಿಸಬೇಕು. ವಿದ್ಯಾರ್ಥಿಗಳ ನಡುವೆ ಭಯಮುಕ್ತ ವಾತಾವರಣ ಸೃಷ್ಟಿಸುವಲ್ಲಿ ವಿದ್ಯಾಸಂಸ್ಥೆಯು ಬದ್ಧರಾಗಿರಬೇಕು ಎಂದಿದೆ.
ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಹಾಗೂ ಹಾಸ್ಟೇಲುಗಳಲ್ಲಿ ರ್ಯಾಗಿಂಗ್ ತಡೆ ಸಮಿತಿಯು ರಚಿಸಿ ರ್ಯಾಗಿಂಗ್ ಹಾಗೂ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಶಾಲಾ-ಕಾಲೇಜುಗಳಲ್ಲಿ ಈ ಸಮಿತಿ ರಚಿಸಲಾಗಿದೆಯೇ ಹಾಗೂ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆಯೇ ಎಂದು ಸಂಬಂಧಪಟ್ಟ ಇಲಾಖೆಗಳು ಪರಿಶೀಲನೆ ನಡೆಸಬೇಕು. ಹಾಗೆಯೇ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಯು ರ್ಯಾಗಿಂಗ್ ಮುಕ್ತ ಅಭಿಯಾನವನ್ನು ನಡೆಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಪರ ಜಿಲ್ಲಾಧಿಕಾರಿ, ರೂಪಾ ಜೆ. ಎಂ. ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷೆ ಮಾಧುರಿ ಬೋಳಾರ್, ಜಿಲ್ಲಾ ಪದಾಧಿಕಾರಿಗಳಾದ ಸಿನಾನ್ ಬೆಂಗ್ರೆ, ಶಮಾಝ್ ಕೆ. ಸಿ. ರೋಡ್, ಜಿಲ್ಲಾ ನಾಯಕರಾದ ತಿಲಕ್ ಕುತ್ತಾರ್, ವಿನೀತ್ ದೇವಾಡಿಗ, ಸಲೋನಿ ಬೋಳಾರ್, ಸಫ್ವಾನ್ ಉಪಸ್ಥಿತರಿದ್ದರು.