ಮಂಗಳೂರು, ಫೆ.27 (DaijiworldNews/MB) : ''ಜನರು ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿದ್ದಾರೆ. ಈಗಾಗಲೇ 20 ಲಕ್ಷ ಕೋಟಿ ಬಿಡುಗಡೆ ಮಾಡಿದ್ದೇವೆ ಎನ್ನುವ ಸರ್ಕಾರ ಯಾರಿಗೆ ಎಷ್ಟು ಹಣ ನೀಡಿದೆ ತಿಳಿಸಲಿ'' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದರು.
ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗಿಯಾಗಲು ವಿಮಾನದ ಮೂಲಕ ಮಂಗಳೂರಿಗೆ ಬಂದ ಅವರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ''ಈಗ ಬೀಡಿ ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದಾಗಿ ಭಾರೀ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ'' ಎಂದರು.
''ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಈಗ ಸಚಿವರಾಗಿರುವವರು ಈ ಹಿಂದೆ ಬೆಲೆ ಏರಿಕೆಯ ಬಗ್ಗೆ ಮಾತನಾಡುತ್ತಿದ್ದರು, ಆದರೆ ಈಗ ಅವರು ಈ ಬೆಲೆ ಏರಿಕೆ ಬಗ್ಗೆ ಏನು ಹೇಳುತ್ತಾರೆ ಎಂದು ಅವರ ಬಳಿಯೇ ಕೇಳಿ'' ಎಂದು ಮಾಧ್ಯಮಕ್ಕೆ ತಿಳಿಸಿದರು.
''ಕೇಂದ್ರ ರಾಜ್ಯ ಎರಡರಲ್ಲೂ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ದಿನಕ್ಕೊಂದು ಕಾನೂನು ಜಾರಿಗೆ ತಂದು ಜನರ ಕಷ್ಟವನ್ನು ಇನ್ನಷ್ಟು ಹೆಚ್ಚಿಸುತ್ತಿದೆ'' ಎಂದು ವಾಗ್ದಾಳಿ ನಡೆಸಿದರು.