ಮಂಗಳೂರು, ಮಾ. 22 (DaijiworldNews/SM): ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂಭವ ಹಿನ್ನೆಲೆ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಉತ್ತಮ ಆರೋಗ್ಯ ಹೊಂದಬೇಕೇ? ದಂಡ ಕಟ್ಟುವುದು ಬೇಡವೇ? ಹಾಗಾದರೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಎಚ್ಚರಿಕೆ ರವಾನಿಸಿದರು.
ಆದರೂ ಸಾರ್ವಜನಿಕರು ಅಂಗಡಿ, ಮಾಲ್ಗಳ ಮಾಲೀಕರು ನಿಯಮ ಉಲಂಘನೆ ಮಾಡುವುದರ ಕುರಿತು ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ದಂಡ ವಿಧಿಸುವ ವೇಳೆ ವಾಗ್ವಾದ ಮಾಡುತ್ತೀರ, ಇದರ ಬದಲು ಸ್ವಯಂ ಪ್ರೇರಿತರಾಗಿ ದಂಡ ಕಟ್ಟುವುದರಿಂದ ತಪ್ಪಿಸಿಕೊಳ್ಳಲು ಹಾಗೂ ಕೊರೊನಾ ಸೋಂಕಿನಿಂದ ದೂರ ಇರಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಇದರಿಂದ ತಮ್ಮ ಹಾಗೂ ತಮ್ಮ ಕುಟುಂಬದ, ನೆರೆಹೊರೆಯವರ ಆರೋಗ್ಯವನ್ನು ಕಾಪಾಡಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಎಚ್ಚರಿಕೆ ರವಾನಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು, ಸಾರ್ವಜನಿಕ ಸ್ಥಳ ಹಾಗೂ ಬಸ್ ನಂತರ ಮಾಲ್ಗಳಿಗೆ ದಾಳಿ ನಡೆಸಿದ ಸಂದರ್ಭದಲ್ಲಿ ನಗರದ ಸಿಟಿ ಸೆಂಟರ್ ಮಾಲ್ ಮೇಲುಸ್ತುದಾರರಿಗೆ ಮಾಲ್ಗಳಲ್ಲಿ ಸಾರ್ವಜನಿಕರು ಪ್ರವೇಶಿಸುವ ಸಂದರ್ಭದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿ ಬಳಸಬೇಕು ಹವಾನಿಯಂತ್ರಣ ಇರುವ ಹಿನ್ನೆಲೆ ಸೋಂಕು ವ್ಯಾಪಕವಾಗಿ ಹರಡುತ್ತದೆ. ಇಂತಹ ಪ್ರಕರಣಗಳು ಮುಂದಿನ ದಿನಗಳಲ್ಲಿ ಕಂಡುಬಂದರೆ ಮಾಲ್ಗಳನ್ನು ಬಂದ್ ಮಾಡುವಂತೆ ಪಾಲಿಕೆಯ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ನಗರದ ಖಾಸಗಿ ಬಸ್ಗಳನ್ನು ತಡೆದು ಸರಿಯಾಗಿ ಮಾಸ್ಕ್ ಧರಿಸದೇ ಕಾರ್ಯನಿರ್ವಹಿಸುತ್ತಿದ್ದ ನಿರ್ವಾಹಕನನ್ನು ತರಾಟೆಗೆ ತೆಗೆದುಕೊಂಡರು ಬಸ್ನಲ್ಲಿ ಮಾಸ್ಕ್ ಧರಿಸದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ದಂಡ ವಿಧಿಸಿದರು. ಪ್ರಯಾಣಿಕರು ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು ಮುಂದೆ ಇಂತಹಾ ನಿರ್ಲಕ್ಷ ಕಂಡು ಬಂದರೆ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದರು.
ನಗರದ ಚಿನ್ನಾಭರಣ ಮಳಿಗೆಗೆ ದಾಳಿ ನಡೆಸಿದ ಸಮಯದಲ್ಲಿ ಅಲ್ಲಿಗೆ ಭೇಟಿ ನೀಡಿದ ಗ್ರಾಹಕರು ಮಾಸ್ಕ್ ಧರಿಸದೇ ಇರುವುದಕ್ಕೆ ಮಳಿಗೆಯ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡು ಇನ್ನು ಮುಂದೆ ಗ್ರಾಹಕರು ನಿಯಮಗಳನ್ನು ಪಾಲನೆ ಮಾಡದೇ ಇರುವುದು ಕಂಡುಬಂದರೆ ಮಳಿಗೆಯ ಸಿಬ್ಬಂದಿಗಳು ಜವಾಬ್ದಾರರಾಗಿರುತ್ತಾರೆ ಆದ್ದರಿಂದ ಅವರ ಮೇಲೆ ದಂಡ ವಿಧಿಸಲಾಗುವುದು ಎಂದ ಅವರು ಮಳಿಗೆ ಒಳಗೆ ಸೀಮಿತ ಸಂಖ್ಯೆಯ ಗ್ರಾಹಕರಿಗೆ ಮಾತ್ರ ಅನುಮತಿ ನೀಡಬೇಕು ಮತ್ತು ಸಾಮಾಜಿಕ ಅಂತರವಿಲ್ಲದೇ ಗ್ರಾಹಕರು ಖರೀದಿ ನಡೆಸದಂತೆ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದರು.