ಮಂಗಳೂರು, ಮಾ. 31 (DaijiworldNews/SM): ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರೋಗ ನಿರೋಧಕ ಲಸಿಕೆ ಪಡೆಯುವುದೇ ಮದ್ದು, ಇದನ್ನು ಪ್ರತಿಯೊಬ್ಬರು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 35,607 ಕೋವಿಡ್ ಕೇಸ್ಗಳು ಆಗಿದ್ದು, ಪ್ರಸ್ತುತ 579 ಪ್ರಕರಣಗಳು ಸಕ್ರೀಯವಾಗಿದೆ. ಕಳೆದ 15 ದಿನಗಳಿಂದ ಪ್ರತಿದಿನ 60-70 ಕೇಸ್ಗಳು ಕಂಡು ಬರುತ್ತಿವೆ. ದಿನವೊಂದಕ್ಕೆ ಜಿಲ್ಲೆಯಲ್ಲಿ 3,000 ಕೋವಿಡ್ ಪರೀಕ್ಷೆಗಳು ಕಡ್ಡಾಯವಾಗಿ ಮಾಡುವುದರೊಂದಿಗೆ ರೋಗಿಗಳನ್ನು ಗುರುತಿಸುವುದರೊಂದಿಗೆ ಅವರನ್ನು ಇತರರೊಂದಿಗೆ ಪ್ರತ್ಯೇಕಿಸಿ ಸೂಕ್ತ ಚಿಕಿತ್ಸೆ ಕೊಡಬೇಕು. ಕೋವಿಡ್ ಮಾರ್ಗಸೂಚಿಗಳಾದ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಚತೆಗೆ ಆದ್ಯತೆ ನೀಡುವುದು ಸೇರಿದಂತೆ ಮತ್ತಿತರ ಕಾರ್ಯಗಳ ಬಗ್ಗೆ ಜನ ಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಇನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾಂಪೌಂಡ್ ವಾಲ್ಗಳನ್ನು ನಿರ್ಮಾಣ ಕಾರ್ಯವನ್ನು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಬೇಕು. ಈಗಾಗಲೇ ನಿರ್ಮಾಣಗೊಂಡಿದ್ದರೆ, ಬಾಕಿ ಉಳಿದ ಆರೋಗ್ಯ ಕೇಂದ್ರಗಳಲ್ಲಿ 6 ತಿಂಗಳಲ್ಲಿ ನಿರ್ಮಿಸುವುದರೊಂದಿಗೆ ಕೈ ತೋಟಗಳನ್ನು ಬೆಳೆಸಬೇಕು. ಕೈ ತೋಟಗಳಲ್ಲಿ ಹೆಚ್ಚಾಗಿ ಔಷಧಿ ಗಿಡಗಳನ್ನು ಬೆಳೆಸಲು ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಕಾರ ಪಡೆಯಬೇಕೆಂದು ವೈಧ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಹರಸಿ ಬರುವ ರೊಗಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಇತರೆ ಮೂಲಭೂತ ಸೌಕರ್ಯಗಳನ್ನು ಸಹ ಕಲ್ಪಿಸಬೇಕು, ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಲ್ಲಾ ತಾಲೂಕು ಆಸ್ಪತ್ರೆಯ ಶೌಚಾಲಯಗಳಲ್ಲಿ ವೆಸ್ಟರ್ನ್ ಶೈಲಿಯ ಶೌಚಾಲಯ ಸೌಲಭ್ಯಗಳನ್ನು ಒದಗಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ ಆಸ್ಪತ್ರೆಗಳಲ್ಲಿ ಕೊರತೆ ಇರುವ ಎ.ಎನ್.ಎಮ್.ಗಳು ಲ್ಯಾಬ್ ಟೆಕ್ನೀಷಿಯನ್ಸ್ಗಳು ಸೇರಿದಂತೆ ಮತ್ತಿತರ ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗುವುದು ಎಂದರು.
ಜಿಲ್ಲೆಯಲ್ಲಿ 22 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದ್ದು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ನ್ನು 8.55 ಲಕ್ಷ ಜನರಿಗೆ ವಿತರಣೆ ಆಗಿದೆ. ಕೇಂದ್ರ ಸರ್ಕಾರ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯವನ್ನು ಕಲ್ಪಿಸಬೇಕೆಂಬ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಈ ಯೋಜನೆಯನ್ನು ಎಲ್ಲಾ ಅರ್ಹ ಅಭ್ಯರ್ಥಿಗಳು ಸದುಪಯೋಗ ಪಡೆಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.