ಮಂಗಳೂರು, ಮಾ. 31 (DaijiworldNews/SM): ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ಕರ್ನಾಟಕಕ್ಕಿಂತಲೂ ಕಡಿಮೆ ಕೊರೋನಾ ಕೇಸ್ ಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಗಡಿಭಾಗದವರು ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರ ಆರ್ಟಿಪಿಸಿಆರ್ ನೆಗೆಟಿವ್ ವರದಿ ನೋಡಿ ಬಿಡಲಾಗುತ್ತಿದೆ. ಕೇರಳದಿಂದ ಪ್ರತಿದಿನ ಜಿಲ್ಲೆಗೆ ಜನ ಬರುತ್ತಿದ್ದಾರೆ. ಎರಡೂ ಜಿಲ್ಲೆಗಳಿಗೆ ಪರಸ್ಪರ ಸಂಬಂಧವಿದೆ. ಬೇರೆ ಬೇರೆ ಕಾರಣಗಳಿಗಾಗಿ ಜನರು ಕರ್ನಾಟಕ ಹಾಗೂ ಕೇರಳ ರಾಜ್ಯಗಳಿಗೆ ಸಂಚರಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ ಕೇರಳದಲ್ಲಿ ಕರ್ನಾಟಕಕ್ಕಿಂತ ಕಡಿಮೆ ಕೋವಿಡ್ ಪ್ರಕರಣ ವರದಿಯಾಗುತ್ತಿರುವುದರಿಂದ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಆದರೂ, ಬಿಗಿಯಾದ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸುತ್ತೇನೆ ಎಂದರು. ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಲಭ್ಯವಿದೆ. ಈಗಾಗಲೇ 2000 ಲಸಿಕಾ ಕೇಂದ್ರ ಕಾರ್ಯನಿರ್ವಹಿಸುತ್ತಿವೆ. ಇನ್ನೂ 3000 ಲಸಿಕಾ ಕೇಂದ್ರ ತೆರೆಯಲು ಸಿದ್ಧತೆ ಮಾಡಲಾಗಿದೆ. ಪ್ರತಿ ಲಸಿಕಾ ಕೇಂದ್ರದಲ್ಲಿ 100 ಮಂದಿ ಲಸಿಕೆ ಹಾಕಿದರೆ, ಪ್ರತಿದಿನ 5 ಲಕ್ಷ ಮಂದಿಗೆ ಲಸಿಕೆ ಹಾಕಿದಂತಾಗುತ್ತದೆ. ಜನ ಲಸಿಕೆ ತೆಗೆದುಕೊಳ್ಳಲು ಮುಂದೆ ಬರಬೇಕು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.