ಸುರತ್ಕಲ್, ಎ.10 (DaijiworldNews/MB) : ''ಶನಿವಾರದಿಂದ ರಾತ್ರಿ ಕರ್ಫ್ಯೂ ಹೇರುವುದರಿಂದಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ವಿನಾಯಿತಿ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ. ಜನಸಾಮಾನ್ಯರ ಈ ಮನವಿಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಗಮನಕ್ಕೆ ತರಲಾಗುವುದು'' ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದರು.
''ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಹೇಳಿದ ಅವರು, ಈಗಾಗಲೇ ನಿಗದಿಯಾಗಿರುವ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಲಾಗುವುದು'' ಎಂದು ಹೇಳಿದರು.
''ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಕಳೆದ ವರ್ಷವೂ ಕೂಡಾ ಧಾರ್ಮಿಕ ಆಚರಣೆ ನಡೆಸಲು ಸಾಧ್ಯವಾಗಿಲ್ಲ. ಈ ಬಾರಿಯೂ ಕೊರೊನಾ ಕಾರಣದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗದಿದ್ದರೆ ಜನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಬಹುದು. ಸರ್ಕಾರವು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ'' ಎಂದರು.
ಶನಿವಾರದಿಂದ ರಾತ್ರಿ ಕರ್ಪ್ಯೂ ವಿಧಿಸುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿಯವರೊಂದಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಚರ್ಚಿಸಿದ್ದಾರೆ.