ಮಂಗಳೂರು, ಏ.11 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆಯ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ಮಂಗಳೂರು ನಗರ ಪಾಲಿಕೆಯ ಎಲ್ಲಾ 60 ವಾರ್ಡ್ಗಳಲ್ಲಿ 50 ಮಾರ್ಷಲ್ಗಳನ್ನು ನಿಯೋಜಿಸಲಾಗಿದೆ.
ಈ ಬಗ್ಗೆ ದಾಯ್ಜಿವಲ್ಡ್ ಜೊತೆ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ, "ಮಂಗಳೂರು ನಗರ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ಜಿಲ್ಲಾಡಳಿತದಿಂದ 50 ಮಾರ್ಷಲ್ಗಳನ್ನು ನಿಯೋಜಿಸಲಾಗಿದೆ. ಈ ಮಾರ್ಷಲ್ಗಳು ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವಲ್ಲಿ ಜನರನ್ನು ಜಾಗೃತಗೊಳಿಸುತ್ತಾರೆ. ಮಾಸ್ಕ್, ಸ್ಯಾನಿಟೈಜರ್ ಬಳಕೆ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಈ ಮಾರ್ಷಲ್ಗಳು ಜಾಗೃತಿಗೊಳಿಸುತ್ತಾರೆ. ಎಂಸಿಸಿ ಅಧಿಕಾರಿಗಳು ಮಾರ್ಷಲ್ಗಳ ಜೊತೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಅಗತ್ಯವಿದ್ದರೆ ಅಥವಾ ಯಾರದರೂ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಅವರಿಗೆ ದಂಢ ವಿಧಿಸಲಾಗುವುದು'' ಎಂದು ಹೇಳಿದರು.
ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾತ್ರ ಮಾರ್ಷಲ್ಸ್ಗಳನ್ನು ನಿಯೋಜಿಸಲಾಗಿದೆ ಎಂದು ಕೂಡಾ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 137 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 36,652 ಕ್ಕೆ ಏರಿವೆ. ಈ ಪೈಕಿ 965 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.