ಉಡುಪಿ ಏ 17 (DaijiworldNews/MS): ಉಡುಪಿ ಜಿಲ್ಲೆಯಲ್ಲಿ ಕೋವಿಡ್ 2 ಅಲೆ ಯನ್ನು ನಿಯಂತ್ರಿಸಲು ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಕರ್ತವ್ಯದಲ್ಲಿ ಯಾವುದೇ ಲೋಪಗಳಾಗದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಅವರು ಶುಕ್ರವಾರ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಈ ಹಿಂದೆ ರಚಿಸಲಾಗಿದ್ದ ಎಲ್ಲಾ ಸಮಿತಿಗಳನ್ನು ತಕ್ಷಣದಿಂದ ಬರುವಂತೆ ಪುರ್ನ ರಚಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿರುವ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಡಿಸಿ ಸೂಚಿಸಿದರು.
ಜಿಲ್ಲೆಯಲ್ಲಿ ಸೋಂಕಿತರ ಪತ್ತೆ ಹಚ್ಚುವ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಕೋವಿಡ್ ಪರೀಕ್ಷೆಗಾಗಿ ರಚಿಸಿರುವ ತಂಡದ ಅಧಿಕಾರಿಗಳು ನಿಗಧಿತ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕು, ಕೋವಿಡ್ ಪರೀಕ್ಷೆ ನಡೆಸಲು ವಿರೋದಿಸುವವರ ವಿರುದ್ದ ಕ್ರಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ ಅವರು, ಎಲ್ಲಾ ತಹಸೀಲ್ದಾರ್ ಗಳು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ತಂಡ ರಚಿಸಿಕೊಂಡು, ಕೋವಿಡ್ ಪರೀಕ್ಷೆ ನಡೆಸುವ ಸಿಬ್ಬಂದಿಗೆ ಅಗತ್ಯ ಸಹಕರ ನೀಡುವಂತೆ ಸೂಚಿಸಿದರು. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸದವರ ವಿರುದ್ದ ದಂಡ ವಿಧಿಸುವ ಅಧಿಕಾರವನ್ನು ನೀಡಿದ್ದರೂ ಹಲವು ಅಧಿಕಾರಿಗಳು ದಂಡ ವಿಧಿಸದಿರುವದನ್ನು ಕುರಿತು ತೀವ್ರ ಅಸಮದಾನ ವ್ಯಕ್ತಪಡಿಸಿ, ಕಾರ್ಯಚರಣೆಯನ್ನು ತೀವ್ರಗೊಳಿಸುವಂತೆ ಸೂಚನೆ ನೀಡಿದರು. ಕೋವಿಡ್ ಸಮಸ್ಯೆಗಳ ಕುರಿತು ೨೪*೭ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಕ್ವಾರಂಟೈನ್ ವಾಚ್ ೧೦೦% ಸಾದನೆ ಅಗಬೇಕು, ಹೋಂ ಐಸೋಲೇಶನ್ ನಲ್ಲಿ ಇರುವವರನ್ನು ನಿಯಮಿತವಾಗಿ ತಪಾಸಣೆ ಮಾಡಬೇಕು ಎಂದರು.
ಐಎಲ್ಐ ಹಾಗೂ ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳಿ , ಮೃತದೇಹಗಳ ವಿಲೇವಾರಿ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಆಗದಂತೆ ಎಚ್ಚರವಹಿಸಬೇಕು, ಈ ಬಗ್ಗೆ ನಿಗಾವಹಿಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು, ಜಿಲ್ಲೆಗೆ ಅಗತ್ಯವಿರುವ ಲಸಿಕೆ, ಆಕ್ಸಿಜಿನ್, ಪಿಪಿಇ ಕಿಟ್, ಮಾಸ್ಕ್ ಗಳು ಅಗತ್ಯ ಸಂಗ್ರಹವಿರುವಂತೆ ನೋಡಿಕೊಳ್ಳಿ, ಸಾಕಷ್ಟು ಮುಂಚಿತವಾಗಿ ಇವುಗಳ ದಾಸ್ತಾನು ಪಡೆಯಿರಿ ಎಂದು ಅಧಿಕಾರಿಗಳಿಗೆ ಜಿ.ಜಗದೀಶ್ ಸೂಚಿಸಿದರು.
ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯತಂಡಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು ಎಲ್ಲರಿಗೂ ಜವಾಬ್ದಾರಿ ವಹಿಸಿದರು. ಎಲ್ಲಾ ತಂಡಗಳಿಗೆ ಅಗತ್ಯ ವಿರುವ ಸಿಬ್ಬಂದಿಗಳನ್ನು ಒದಗಿಸಲಾಗುವುದು, ಎಲ್ಲಾ ತಂಡಗಳು ಸಂಘಟಿತವಾಗಿ , ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೆಕು ಹಾಗೂ ಪ್ರತಿ ದಿನದ ಕಾರ್ಯ ಪ್ರಗತಿಯ ವಿವರಗಳನ್ನು ನೀಡಬೆಕು ಎಂದು ಡಿಸಿ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ರಾಜು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಡಿಹೆಚ್ ಓ ಡಾ. ಸುದೀರ್ ಚಂಧ್ರ ಸೂಢಾ, ಜಿಲ್ಲಾ ಕೋವಿಡ್ ನೋಢೆಲ್ ಅಧಿಕಾರಿ ಡಾ. ಪ್ರಶಾಂತ ಭಟ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.