ಮಂಗಳೂರು, ಎ.18 (DaijiworldNews/PY): "ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಎಪ್ರಿಲ್ 19ರಿಂದ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯು (ವಿಟಿಯು) ಪರೀಕ್ಷೆಗಳನ್ನು ಮುಂದೂಡಬೇಕು" ಎಂದು ಕಾಂಗ್ರೆಸ್ನ ಯುವ ಮುಖಂಡ ಮಿಥುನ್ ರೈ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, "ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಜೆಇಇ, ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿಟಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಲವಾರು ವಿದ್ಯಾರ್ಥಿಗಳಿಗೆ ಹಾಗೂ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೇಗೆ ಸಾಧ್ಯ?. ಒಂದು ವೇಳೆ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಇದ್ದಲ್ಲಿ ಅವರನ್ನು ಅನುತ್ತೀರ್ಣರನ್ನಾಗಿ ಮಾಡಲಾಗುತ್ತದೆ. ಇದು ನ್ಯಾಯವಲ್ಲ. ಈ ಹಿನ್ನೆಲೆ, ವಿಟಿಯು ಪರೀಕ್ಷೆಗಳನ್ನು ಮುಂದೂಡಬೇಕು ಎಂದು ನಾನು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ" ಎಂದಿದ್ದಾರೆ.
"ರಾಜ್ಯದಲ್ಲಿ ದಿನದಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹಾಸ್ಟೆಲ್ನಲ್ಲಿರುವ ಅನೇಕ ವಿದ್ಯಾರ್ಥಿಗಳು ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಹಲವಾರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಕೂಡಾ ಪರೀಕ್ಷೆ ನಡೆಸುತ್ತೇವೆ ಎನ್ನುವ ತೀರ್ಮಾನ ಸರಿಯಲ್ಲ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುತ್ತದೆ ಎನ್ನುವ ಭರವಸೆ ಇದೆ" ಎಂದು ತಿಳಿಸಿದ್ದಾರೆ.