ಉಡುಪಿ, ಏ 20(DaijiworldNews/MS): ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಆಂದೋಲನ"ದ ಪ್ರಥಮ ಹಂತವಾಗಿ ಕೃಷಿ ಚಟುವಟಿಕೆ ನಡೆಸುವ ಗದ್ದೆಗಳಿಗೆ ಸಮರ್ಪಕವಾಗಿ ನೀರು ಹರಿದು ಹೋಗಲು ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಶಾಸಕ ಕೆ. ರಘುಪತಿ ಭಟ್ ಹಾಗೂ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್ ರವರು ಚಾಲನೆ ನೀಡಿದರು.
ಮೊದಲ ಹಂತವಾಗಿ ಉಡುಪಿ ನಗರದ ಕೆಳಪರ್ಕಳ ಗೋಪಾಲಕೃಷ್ಣ ದೇವಸ್ಥಾನದ ಬಳಿ ಗದ್ದೆಗಳಿಗೆ ನೀರು ಹರಿದುಹೋಗುವ ತೋಡಿನ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಜಗದೀಶ್ "ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರಕಾರ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ. ಜಿಲ್ಲೆಯಲ್ಲಿ ಹಡಿಲು ಬಿಟ್ಟಿರುವ ಭೂಮಿಗಳನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್ ರಿಗೆ ಸೂಚನೆ ನೀಡಲಾಗಿದೆ. ಎರಡನೇ ಹಂತವಾಗಿ ಹಡಿಲು ಭೂಮಿ ಮಾಲಿಕರಿಗೆ ನೋಟಿಸು ನೀಡಲಾಗುವುದು. ಇದರ ನಮತರ ಕೂಡಾ ಕೃಷಿ ಮಾಡದೇ ಹೋದಲ್ಲಿ ಅದನ್ನು ಸರಕಾರದ ವಶಕ್ಕೆ ತೆಗೆದುಕೊಳ್ಳಲು ಅವಕಾಶ ಇದೆ" ಎಂದರು.
ಶಾಸಕ ರಘುಪತಿ ಭಟ್ ಮಾತನಾಡಿ "ಹಡಿಲು ಭೂಮಿ ಕೃಷಿ ಆಂದೋಲನವು ನಗರಸಭೆಯ ೩೫ ವಾರ್ಡ್ ಮತ್ತು ಕೆಲವುವೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಲಿದೆ. ಕೃಷಿ ಇಲಾಖೆ ಮತ್ತು ಇನ್ನಿತರ ಸಂಘ ಸಂಸ್ಥೆಗಳು ಕೂಡಾ ಅಭಿಯಾನಕ್ಕೆ ಸಹಕಾರ ನೀಡುತ್ತಿವೆ" ಎಂದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರದಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ನಿಟ್ಟೂರು ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಮುರಳಿ ಕಡೆಕಾರ್ ಸ್ಥಳೀಯರಾದ ರಂಜಿತ್, ಹೇಮಂತ್ ಹಾಗೂ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೇಷ ಕೃಷ್ಣ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.