ವಿಟ್ಲ, ಎ.23 (DaijiworldNews/PY): ಲಾರಿ, ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ಸಂಭವಿಸಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದು ಈ ಸರಣಿ ಅಪಘಾತ ಸಂಭವಿಸಿದೆ.
ಟಾಟಾ ವಾಹನ ಚಾಲಕ ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರ ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ವಾಹನ ಸಂಚಾರ ನಿಯಂತ್ರಿಸಿದರು. ಘಟನೆಯಲ್ಲಿ ಏಸ್ ವಾಹನದ ಮುಂಭಾಗ ಜಖಂಗೊಂಡಿದೆ.
ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಭಾಗವನ್ನು ಅಪಘಾತ ವಲಯ ಎಂದು ಪರಿಗಣಿಸಲಾಗಿತ್ತು. ಆದರೆ, ಸ್ಥಳದಲ್ಲಿ ನಿರಂತರ ಅಪಘಾತ ಸಂಭವಿಸಿದೆ. ಈ ಹಿಂದೆ ಅಪಘಾತ ಸಂಭವಿಸಿ ಹಲವು ಜೀವಗಳು ಬಲಿಯಾಗಿತ್ತು.