ಮಣಿಪಾಲ, ಎ.24 (DaijiworldNews/PY): "ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ರಕ್ತದ ತೀವ್ರ ಕೊರತೆ ಇದ್ದು, ರಕ್ತದ ಕೊರತೆಯಿಂದ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಅನಾನುಕೂಲವಾಗಿದೆ. ಈ ನಿಟ್ಟಿನಲ್ಲಿ, ಕೊರೊನಾ ಲಸಿಕೆ ತೆಗೆದುಕೊಳ್ಳುವ 2 ದಿನಗಳ ಮುನ್ನ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ರಕ್ತದಾನ ಮಾಡಬೇಕು" ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
"ಮೇ 20ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ, ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯುವ ನಡುವೆ 28 ದಿನಗಳ ಅಂತರವಿರುತ್ತದೆ. ಹಾಗಾಗಿ ರಕ್ತದಾನ ಮಾಡಲು ಸಾಧ್ಯವಿಲ್ಲ. ರಕ್ತದಾನ ಮಾಡುವವರಲ್ಲಿ ಹೆಚ್ಚಿನವರು 18 ರಿಂದ 40 ವರ್ಷದೊಳಗಿನವರಾಗಿದ್ದಾರೆ. ರಕ್ತದ ಕೊರತೆ, ಅಪಘಾತಕ್ಕೀಡಾದವರು ಮುಂತಾದ ತುರ್ತು ಚಿಕಿತ್ಸೆಗೆ ರಕ್ತದ ಅವಶ್ಯಕತೆ ಇದೆ. ಹಾಗಾಗಿ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಬೇಕು" ಎಂದಿದ್ದಾರೆ.