ಮಂಗಳೂರು, ಏ 26(DaijiworldNews/MS): ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಏ.26ರ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಆಕ್ಸಿಜನ್ ಪೂರೈಕೆದಾರರ, ಐಎಂಎ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ , ಆಕ್ಸಿಜನ್ ಕೊರತೆ ಉಂಟಾಗದಂತೆ, ಸಕಾಲದಲ್ಲಿ ಆಕ್ಸಿಜನ್ ಪೂರೈಸುವ ಕುರಿತು ಚರ್ಚೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ " ಈಗಾಗಲೇ ಇಎಸ್ಐ ಹಾಗೂ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಎಂಸಿಎಫ್ ವತಿಯಿಂದ ಸಿಎಸ್ಆರ್ ಅನುದಾನದಡಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸುವ ಕುರಿತು ನಿರ್ಧರಿಸಲಾಗಿದೆ. ಇನ್ನೊಂದು ತಾಲೂಕಿಗೆ ಎಂ.ಆರ್.ಪಿ.ಎಲ್ ಮೂಲಕ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ರೂಪುರೇಷೆ ಸಿದ್ಧಪಡಿಸಲಾಗಿದೆ. ಇನ್ನುಳಿದ ಎರಡು ತಾಲೂಕಿಗೆ ಸಣ್ಣ ಪ್ರಮಾಣದ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಅತೀ ಶೀಘ್ರದಲ್ಲೇ ಯೋಜನೆ ಪೂರ್ಣಗೊಳಿಸುವ ಚಿಂತನೆಯಿದೆ ಎಂದು ಹೇಳಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಮುಂದಿನ 45-50 ದಿನಗಳೊಳಗೆ ಪ್ಲಾಂಟ್ ನಿರ್ಮಾಣವಾಗಲಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಜಿಲ್ಲಾಡಳಿತದ ವತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಸಭೆಯಲ್ಲಿ ಆಕ್ಸಿಜನ್ ಪೂರೈಕೆದಾರರು,ಐಎಂಎ ವೈದ್ಯರ ತಂಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.