ಕಾರ್ಕಳ, ಎ.26 (DaijiworldNews/PY): "ಕೊರೊನಾ ಎರಡನೇ ಅಲೆಯು ತೀವ್ರ ತರಹದಲ್ಲಿ ಹರಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಕೊರೊನಾ ನಿಯಂತ್ರಣಕ್ಕೆ ಸರಕಾರ ಹಲವಾರು ಯೋಜನೆಗಳನ್ನು ತಂದರೂ ಕೂಡ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪರೀಕ್ಷೆ ಮಾಡುವುದಕ್ಕೆ ಆದ್ಯತೆಯನ್ನು ನೀಡಬೇಕು" ಎಂದು ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ಸುನೀಲ್ ಕುಮಾರ್ ವಿನಂತಿಸಿದ್ದಾರೆ.
"ಹೊರಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬಂದಿರುವ ಎಲ್ಲರೂ ಕೂಡ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಒಂದು ವೇಳೆ ಪಾಸಿಟಿವ್ ಬಂದರೂ ಕೂಡ ಸಣ್ಣ ರೋಗ ಲಕ್ಷಣಗಳಿದ್ದರೆ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಕ್ವಾರಂಟೈನ್ ಆಗುವ ಮೂಲಕ ಚಿಕಿತ್ಸೆ ಪಡೆಯಬಹುದು. ಆ ಭಾಗದ ಆಶಾ ಕಾರ್ಯಕರ್ತೆಯರು ಮನೆಗೆ ಬಂದು ನೀಡುವ ಸೂಕ್ತ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಬೇಕಾಗುತ್ತದೆ. ಅಂತಹ ಗಂಭೀರ ಸಮಸ್ಯೆಗಳೇನಾದರೂ ಇದ್ದಲ್ಲಿ ಕಾರ್ಕಳ ಆಸ್ಪತ್ರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನು ಮಾಡಿದ್ದು, ತಕ್ಷಣವೇ ಚಿಕಿತ್ಸೆಯನ್ನು ನೀಡುವ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಯಾರೂ ಕೂಡ ಭಯ ಪಡುವ ಅಗತ್ಯವಿರುವುದಿಲ್ಲ" ಎಂದು ತಿಳಿಸಿದ್ದಾರೆ.
"ಆದ್ದರಿಂದ, ಕೊರೊನಾ ನಿಯಂತ್ರಣ ಮಾಡುವಲ್ಲಿ ತಾವು ಪರೀಕ್ಷೆ ಮಾಡುವುದಲ್ಲದೆ ಇತರರಿಗೂ ಪರೀಕ್ಷೆ ಮಾಡುವಂತೆ ಪ್ರೊತ್ಸಾಹಿಸಿ. ಈ ನಿಟ್ಟಿನಲ್ಲಿ ನಮ್ಮ ತಾಲೂಕಿನಲ್ಲಿ ಕೊರೊನಾ ಹರಡುವುದನ್ನು ನಿಯಂತ್ರಣದಲ್ಲಿರಿಸಲು ಎಲ್ಲಾ ಸಾರ್ವಜನಿಕರು ಸಹಕರಿಸಬೇಕು" ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.