ಮಂಗಳೂರು, ಏ.28 (DaijiworldNews/MB) : ರಾಜ್ಯ ಮುಖ್ಯ ಕಾರ್ಯದರ್ಶಿಗಳ ಕೋವಿಡ್ ಆದೇಶ ಉಲ್ಲಂಘಿಸಿ ಮತ್ತೆ ಸಾರ್ವಜನಿಕರನ್ನು ಸೇರಿಸಿ ರಥೋತ್ಸವ ನಡೆಸಿದ ಸೋಮೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅಧ್ಯಕ್ಷರ ವಿರುದ್ಧ ಮತ್ತೊಂದು ಎಫ್ಐಆರ್ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಸೆಕ್ಷನ್ 188, 269 ಹಾಗೂ ಸಾಂಕ್ರಾಮಿಕ ರೋಗ ಹರಡುವಿಕೆ ಕಾಯ್ದೆಯ ಸೆಕ್ಷನ್ 5 ರಡಿ ಸೋಮನಾಥೇಶ್ವರ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.26 ರಂದು ಸೋಮೇಶ್ವರ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ನಡೆದಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ, ವೀಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಕ್ರಮಕ್ಕೆ ಆಗ್ರಹಿಸಿದ್ದರು. ಜಿಲ್ಲಾಧಿಕಾರಿ ಆದೇಶದಂತೆ ಸೋಮೇಶ್ವರ ಪುರಸಭೆ ಪ್ರಬಂಧಕ ಕೃಷ್ಣ ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.