ಮಂಗಳೂರು, ಮೇ 05 (DaijiworldNews/SM): ಕೋವಿಡ್ ಸೋಂಕು ಧೃಡಪಟ್ಟಿರುವ ರೋಗಿಗಳಲ್ಲಿ ಶೇಕಡಾ 85.70ಗೂ ಹೆಚ್ಚು ರೋಗಿಗಳು ಹೋಮ್ ಐಸೋಲೇಶನ್ ಚಿಕಿತ್ಸೆ ಪಡೆಯುತ್ತಿದ್ದು. ಇವರ ಆರೋಗ್ಯ ಕ್ಷೇಮಗಳನ್ನು ವಿಚಾರಿಸಲು ವೈದ್ಯಕೀಯ ತಂಡಗಳನ್ನು ರಚನೆ ಮಾಡುವುದರೊಂದಿಗೆ ಅವರುಗಳಿಗೆ ಸೂಕ್ತ ಚಿಕಿತ್ಸೆ ಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ 8,414 ಕೋವಿಡ್ ಸಕ್ರೀಯ ಪ್ರಕರಣಗಳಿದ್ದು, ಅವುಗಳಲ್ಲಿ 1,204 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7,210 ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ರೋಗಿಗಳು ಶೇ.14.30 ರಷ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಉಳಿದವರು ಹೋಮ್ ಐಸೋಲೇಷನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಶೇ.75 ರಷ್ಟು ನಗರ ಪ್ರದೇಶದ ವ್ಯಾಪ್ತಿಯವರೇ ಇದ್ದಾರೆ. ಅವರುಗಳಿಗೆ ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ ಅವರ ಯೋಗಕ್ಷೇಮ ಪ್ರತಿದಿನ ವಿಚಾರಿಸಬೇಕೆಂದು ಹೇಳಿದರು.
ಹೋಮ್ ಐಸೋಲೇಷನ್ ಒಳಗಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರನ್ನು ಒಳಗೊಂಡ 78ಕ್ಕೂ ಹೆಚ್ಚು ತಂಡಗಳನ್ನು ರಚಿಸುವುದರೊಂದಿಗೆ ಅವರುಗಳು ಮನೆಮನೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು. ಇವುಗಳ ಮೇಲ್ವಿಚಾರಣೆ ಮಾಡಲು ಸಹ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜನರು ದಿನನಿತ್ಯದ ಅವಶ್ಯಕ ವಸ್ತುಗಳನ್ನು ಖರೀದಿಸಲು ಕೋವಿಡ್ ಕಫ್ರ್ಯೂನಲ್ಲಿ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶ ನೀಡಲಾಗಿದೆ. ಆದರೆ ಕೆಲವರು ಯಾವುದೇ ಅವಶ್ಯಕ ಕೆಲಸವಿಲ್ಲದಿರುವವರು ಅನಗತ್ಯವಾಗಿ ತಿರುಗಾಡುವುದು ಕಂಡುಬರುತ್ತದೆ. ಇದಕ್ಕೆ ಜನರು ಕಡಿವಾಣ ಹಾಕಬೇಕು ಎಂದರು.