ಮಂಗಳೂರು, ಮೇ 10 (DaijiworldNews/MB) : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೇ 9 ರ ಭಾನುವಾರದಂದು ಇಲ್ಲಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಅಸುನೀಗಿದ್ದು, ಈ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ಪ್ರತಿಭಟನೆ ನಡೆಸಿದರು.
ಬಂಟ್ವಾಳ ಮೂಲದ 51 ವರ್ಷದ ಮಹಿಳೆಗೆ ಕೊರೊನಾ ಸೋಂಕಿನ ಕಾರಣ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಮಧ್ಯಾಹ್ನದವರೆಗೂ ಅವರು ಹುಷಾರಾಗಿದ್ದರು. ಹಾಗೆಯೇ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದರು ಎಂದು ಹೇಳಲಾಗಿದೆ.
ಆದರೆ ಬಳಿಕ ಇದ್ದಕ್ಕಿದ್ದಂತೆ ಅವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿದ್ದ ಮಹಿಳೆಯನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಹಾಗೆಯೇ ಯಾವುದೇ ವೆಂಟಿಲೇಟರ್ ವ್ಯವಸ್ಥೆ ಮಾಡದೆಯೇ ಸೋಂಕಿತರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ದೂರಿರುವ ಕುಟುಂಬಸ್ಥರು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನು ಆಸ್ಪತ್ರೆಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಮೃತರ ಸಂಬಂಧಿಕರು, ಕರ್ತವ್ಯದಲ್ಲಿರುವ ವೈದ್ಯಕೀಯ ಅಧಿಕಾರಿಗಳೊಂದಿಗೆ ಮಾತನಾಡಿದರು.