ಕಾಸರಗೋಡು, ಮೇ 16 (DaijiworldNews/SM): ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮತ್ತಷ್ಟು ಚುರುಕುಗೊಳಿಸಲು ರವಿವಾರ ನಡೆದ ಕೊರೋನಾ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.
ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ತಪಾಸಣೆ ಹೆಚ್ಚಿಸಲಾಗುವುದು. ಬಂದರುಗಳನ್ನು ಮುಚ್ಚಬೇಕು. ಮೀನುಗಾರಿಕೆ ನಡೆಸದಂತೆ ಆದೇಶ ನೀಡಲಾಗಿದೆ. ಜಿಲ್ಲೆಯಲ್ಲಿರುವ ಹೊರ ರಾಜ್ಯ ಕಾರ್ಮಿಕರಿಗೆ ಶೀಘ್ರ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಗುವುದು. ಕಾರ್ಮಿಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಗಳ ಮಾಹಿತಿಗಳನ್ನು ಕಲೆ ಹಾಕಲಾಗುವುದು. ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಅಡಚಣೆ ಮಾಡಬಾರದು. ಆದರೆ ಒಂದೇ ಸ್ಥಳದಲ್ಲಿ ಮಾತ್ರ ಕೆಲಸ ಮಾಡಲು ಅನುಮತಿ ನೀಡಲಾಗುವುದು. ಗರಿಷ್ಟ ಐದು ಕಾರ್ಮಿಕರಿಗೆ ಕೆಲಸ ಮಾಡಲು ಅಡ್ಡಿ ಇಲ್ಲ ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ.
ಬೀಡಿ ಕಾರ್ಮಿಕರ ಕೆಲಸಕ್ಕೆ ಅಡ್ಡಿಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು. ಸರಕಾರಿ ನಿರ್ಮಾಣ ಚಟುವಟಿಕೆಗಳು ಯಾವುದೇ ಅಡ್ಡಿಯಿಲ್ಲದೆ ಪೂರ್ಣಗೊಳಿಸಲಾಗುವುದು. ಜಿಲ್ಲೆಯ ಆರು ಬ್ಲಾಕ್ ಪಂಚಾಯತ್ ಗಳಿಗೆ ಒದಗಿಸಿದ ಅಂಬ್ಯುಲೆನ್ಸ್ ಗಳನ್ನು ಶೀಘ್ರ ಚಾಲನೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲೆಯಲ್ಲಿ ತೆರವಾಗಿರುವ 49 ವೈದ್ಯರ ಹುದ್ದೆಗಳನ್ನು ಶೀಘ್ರ ಭರ್ತಿಗೊಳಿಸಲು ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಕಂದಾಯ ಸಚಿವ ಇ. ಚಂದ್ರಶೇಖರನ್ ಹೇಳಿದರು. ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.