ಮಂಗಳೂರು, ಮೇ.18 (DaijiworldNews/PY): "ಕೊರೊನಾ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರನ್ನೂ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ. ಅವರಿಗೆ ಎಲ್ಲಾ ವಿಶೇಷ ಸೌಲಭ್ಯಗಳನ್ನು ನೀಡಬೇಕು. ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಶಿಕ್ಷಕರು, ಪಂಚಾಯತ್ ಪಿಡಿಓ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳನ್ನು ಹೊರಗಿಟ್ಟಿರುವುದು ಸರಿಯಲ್ಲ" ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಗ್ರಾ.ಪಂ ಮಟ್ಟದಲ್ಲಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಹಾಗೂ ಪಂಚಾಯತ್ ಪಿಡಿಓ ಪಾತ್ರ ಮಹತ್ವದಾಗಿದೆ. ಕೂಡಲೇ ಇವರನ್ನು ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು" ಎಂದು ಒತ್ತಾಯಿಸಿದ್ದಾರೆ.
"ವಲಸೆ ಕಾರ್ಮಿಕರು ಹಾಗೂ ಇನ್ನಿತರ ಕಾರ್ಮಿಕರ ಜೊತೆ ಸಂಪರ್ಕ ಹೊಂದಿರುವ ಹಾಗೂ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕ ಇಲಾಖೆಯ ನೌಕರರಿಗೆ ಕೊರೊನಾ ವಾರಿಯರ್ಸ್ಗಳಿಗೆ ನೀಡುವ ಸೌಲರ್ಭಗಳನ್ನು ಒದಗಿಸಬೇಕು" ಎಂದಿದ್ದಾರೆ.
"ರಾಜ್ಯದಲ್ಲಿ ಈಗಾಗಲೇ ಹಲವು ಮಂದಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಶಿಕ್ಷಕರು ಸೇರಿದಂತೆ ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳನ್ನು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ. ಇವರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು" ಎಂದು ಒತ್ತಾಯಿಸಿದ್ದಾರೆ.