ಉಡುಪಿ, ಮೇ 18 (DaijiworldNews/MS): ತೌಕ್ತೆ ಚಂಡಮಾರುತದಿಂದ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿಯಾಗಿದ್ದು, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಹಾನಿ ಅಂದಾಜು ಮಾಡಿ ಮನೆ ಕಳೆದುಕೊಂಡವರಿಗೆ, ಬೆಳೆ ಹಾನಿ ಅನುಭವಿಸಿದವರಿಗೆ ಕೂಡಲೆ ಪರಿಹಾರ ನೀಡುವ ಕಾರ್ಯ ಮಾಡಬೇಕು. ಎನ್.ಡಿ.ಆರ್.ಎಫ್ ಮೂಲಕ ಹಣವನ್ನು ಬಿಡುಗಡೆ ಮಾಡುತ್ತೇನೆ. ಅಧಿಕಾರಿಗಳು ಹಾನಿಯಾಗಿರುವ, ರಸ್ತೆ, ವಿದ್ಯುತ್ ಸರಿಪಡಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಕಂದಾಯ ಸಚಿವ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ಹೇಳಿದರು.
ಅವರು ಮರವಂತೆಯಲ್ಲಿ ಕಡಲ್ಕೊರೆತ ಸ್ಥಳಗಳ ವೀಕ್ಷಣೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮರವಂತೆಯಲ್ಲಿ 1 ಕಿ,ಮೀ ರಸ್ತೆ ಸಮುದ್ರದ ಅಲೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿದೆ. ಇದು ದೊಡ್ಡಮಟ್ಟದ ಹಾನಿಯಾಗಿದೆ. 106 ಮನೆಗಳಿಗೆ ಚಂಡಮಾರುತದಿಂದ ಹಾನಿಯಾಗಿದೆ. ಒಂದು ಸಾವು ಸಂಭವಿಸಿದೆ. 100ಕ್ಕೂ ಹೆಚ್ಚು ತೆಂಗಿನ ಮರಗಳು ಧರೆಗೆ ಉರುಳಿವೆ. ರಸ್ತೆಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಕ್ಲಪ್ತ ಸಮಯದಲ್ಲಿ ಪರಿಹಾರೋಪಾಯಗಳನ್ನು ಕಂಡು ಕೊಳ್ಳುವ ಕಾರ್ಯ ಆಗಬೇಕಿದೆ. ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವ ಕೆಲಸವನ್ನು ಕೂಡಲೇ ಮಾಡಿ,ಪ್ರಾಣ ಹಾನಿಯಾದ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಒದಗಿಸಲಾಗುವುದು ಎಂದು ಹೇಳಿದರು.
ಮರವಂತೆಯ ಹೊಸ ರಸ್ತೆ ಅಲೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿರುವುದು ದೊಡ್ಡ ನಷ್ಟ. ರಸ್ತೆಯನ್ನು ಪುನನಿರ್ಮಾಣ ಮಾಡುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಲಾಕ್ ಡೌನ್ ಮುಂದುವರಿಯಲಿದೆಯೇ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಕೊರೋನಾ ಪಾಸಿಟಿವ್ ಪ್ರಮಾಣ, ಸಾವು ನೋವುಗಳು ಕಡಿಮೆಯಾಗುವುದನ್ನು ಕಂಡರೆ ಲಾಕ್ ಡೌನ್ ಮುಂದುವರಿಸುವುದು ಒಳಿತು ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸಳೆಯಲಾಗುವುದು. ಲಾಕೌಡೌನ್ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ತಗೆದುಕೊಳ್ಳುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಶಂಕರ ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉದಯಕುಮಾರ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಸಹಾಯಕ ಆಯುಕ್ತ ಕೆ.ರಾಜು, ತಹಶೀಲ್ದಾರ್ ಶೋಭಾಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.