ಮಂಗಳೂರು, ಮೇ.18 (DaijiworldNews/HR): ಅಲ್ಪ ಪ್ರಮಾಣದ ರೋಗ ಲಕ್ಷಣಗಳಿದ್ದು ಮನೆಯಲ್ಲಿ ಕ್ವಾರಂಟೈನ್ ಆಗಲು ವ್ಯವಸ್ಥೆಯಿಲ್ಲದಿರುವ ಕೊರೊನಾ ಸೋಂಕಿತರಿಗಾಗಿ ಇಎಸ್ಐ ಆಸ್ಪತ್ರೆಯಲ್ಲಿ ತೆರೆದಿರುವ ಕೊರೊನಾ ಕೇರ್ ಸೆಂಟರ್ಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಶಾಸಕ ಕಾಮತ್, "ಜಿಲ್ಲಾಡಳಿತವು ಅಲ್ಪ ಪ್ರಮಾಣದ ರೋಗ ಲಕ್ಷಣಗಳಿದ್ದು ಆರೋಗ್ಯವಾಗಿರುವ ಕೊರೊನಾ ಸೋಂಕಿತರ ಶುಶ್ರೂಷೆಗಾಗಿ ಇಎಸ್ಐ ಆಸ್ಪತ್ರೆಯಲ್ಲಿ ಕೊರೊನಾ ಕೇರ್ ಸೆಂಟರ್ ತೆರೆಯಾಗಿದ್ದು, ಸದ್ಯ ಇಲ್ಲಿ 22 ಜನರು ಚಿಕಿತ್ಸೆ ಪಡೆಯುತಿದ್ದಾರೆ. ಒಟ್ಟು 50 ಬೆಡ್ ವ್ಯವಸ್ಥೆ ಮಾಡಲಾಗಿದ್ದು ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ನಿಯಮಿತವಾಗಿ ಔಷಧಗಳು ಹಾಗೂ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದೆ." ಎಂದು ತಿಳಿಸಿದ್ದಾರೆ.
ಇನ್ನು "ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹಕಾರದಿಂದ ಎಂ.ಸಿ.ಎಫ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಆಕ್ಸಿಜನ್ ಪ್ಲಾಂಟ್ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ" ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮುಖಂಡರಾದ ಸಂಜಯ್ ಪ್ರಭು, ಆಸ್ಪತ್ರೆಯ ವೈಧ್ಯಾಧಿಕಾರಿ ಶೈಲಜಾ, ಡಾ. ಸಚ್ಚಿದಾನಂದ ರೈ ಹಾಗೂ ಇತರರು ಉಪಸ್ಥಿತರಿದ್ದರು.