ಮಂಗಳೂರು, ಮೇ.19 (DaijiworldNews/PY): "ರಾಜ್ಯದಲ್ಲಿ ಪಡಿತರ ವ್ಯವಸ್ಥೆ ಅಸಮರ್ಪಕವಾಗಿದೆ. ಜನರಿಗೆ ಪಡಿತರ ಸಾಮಾಗ್ರಿಗಳನ್ನು ವಿತರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಜನರು ಎದುರಿಸುತ್ತಿರುವ ಸಮಸ್ಯೆಯನ್ನು ಸರ್ಕಾರ ಸರಿಪಡಿಸಬೇಕು" ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮೊದಲು ಬಿಜೆಪಿ ಪ್ರತಿನಿಧಿಗಳು ಕೊರೊನಾ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಸರ್ಕಾರವು ಜನರಿಗೆ ಸಾಕಷ್ಟು ಲಸಿಕೆಗಳನ್ನು ಪೂರೈಕೆ ಮಾಡಬೇಕಿತ್ತು. ಆರಂಭದಿಂದಲೇ ಇದಕ್ಕೆ ಸಿದ್ದವಾಗಬೇಕಿತ್ತು. ಕಾಂಗ್ರೆಸ್ ನಾಯಕರನ್ನು ಟೀಕಿಸುವ ಬಿಜೆಪಿ ನಾಯಕರು ಇದಕ್ಕೆ ಉತ್ತರಿಸಬೇಕು" ಎಂದು ಒತ್ತಾಯಿಸಿದ್ದಾರೆ.
"ಕೊರೊನಾ ಸಂಕಷ್ಟದ ಕಾಲದಲ್ಲಿ ಸರ್ಕಾರ ಜನರಿಗೆ ಸಮರ್ಪಕವಾದ ಪಡಿತರ ವ್ಯವಸ್ಥೆಯನ್ನು ಮಾಡಬೇಕಿತ್ತು. ಆದರೆ, ಇದರಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸೂಕ್ತ ಕಾರಣಗಳಿಲ್ಲದೇ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುತ್ತಿದೆ. ಜನರಿಗೆ ಪೌಷ್ಟಿಕ ಆಹಾರ ಧಾನ್ಯ, ಕುಚ್ಚಲಕ್ಕಿ ಸಿಗುತ್ತಿಲ್ಲ. ಪಡಿತರ ಚೀಟಿಯ ಮೂಲಕ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಸಾಮಾಗ್ರಿಯನ್ನು ಪಡೆಯುವ ವ್ಯವಸ್ಥೆಯನ್ನು ಸ್ಥಗಿತಗೊಳಿಸಿದ ಕಾರಣ ಜನರು ಇಂದು ಸಮಸ್ಯೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಜನರು ಈ ಸಮಸ್ಯೆಯನ್ನು ಎದುರಿಸಲಿಲ್ಲ" ಎಂದಿದ್ದಾರೆ.
"ಕೊರೊನಾದ ಈ ಸಂಕಷ್ಟದ ಸಂದರ್ಭ ಜಿಲ್ಲಾಧಿಕಾರಿಗೆ ಎಲ್ಲಾ ಅಧಿಕಾರ ನೀಡಿದರೆ ಸಚಿವರು, ಶಾಸಕರುಗಳಿಗೆ ಏನಿದೆ ಕೆಲಸ?. ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ ಎಂದು ಹೇಳುವ ಮೂಲಕ ಜನರ ದಾರಿ ತಪ್ಪಿಸಲಾಗುತ್ತಿದೆ" ಎಂದು ಆರೋಪಿಸಿದ್ದಾರೆ.
"ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವತ್ತ ಸರ್ಕಾರ ಗಮನಹರಿಸಬೇಕು. ಆದರೆ, ಈಗ ಒಂದೊಂದು ಆಸ್ಪತ್ರೆಗಳಲ್ಲಿ ಒಂದೊಂದು ರೀತಿಯ ಶುಲ್ಕ ವಿಧಿಸಲಾಗಿದೆ" ಎಂದು ಹೇಳಿದ್ದಾರೆ.
"ನಾನು ಲಸಿಕೆ ನೀಡುವುದನ್ನು ಎಂದಿಗೂ ವಿರೋಧಿಸಲಿಲ್ಲ. ಆದರೆ, ಮೊದಲು ಬಿಜೆಪಿ ಪ್ರತಿನಿಧಿಗಳು ಕೊರೊನಾ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಸರ್ಕಾರವು ಜನರಿಗೆ ಸಾಕಷ್ಟು ಲಸಿಕೆಗಳನ್ನು ಪೂರೈಕೆ ಮಾಡಬೇಕಿತ್ತು. ಇದರ ಬದಲು ಆರೋಪಗಳನ್ನು ಮಾಡುತ್ತಿದ್ದಾರೆ. ಎಲ್ಲರಿಗೆ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳದ ಕಾರಣ ಜನರು ಲಸಿಕೆಗಾಗಿ ಪರದಾಡುವ ಸ್ಥಿತಿ ಎದುರಾಗಿದೆ. ಈ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು" ಎಂದು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ರಫೀಕ್, ರಮ್ಲಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.