ಕುಂದಾಪುರ, ಮೇ 22 (DaijiworldNews/SM): ಮೆಹಂದಿ ಕಾರ್ಯಕ್ರಮವೊಂದರಲ್ಲಿ ಮಾಸ್ಕ್ ಇಲ್ಲದೆ ಭಾಗವಹಿಸಿದ್ದ 7 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕುಂದಾಪುರ ತಾಲೂಕಿನ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಶುಕ್ರವಾರದಂದು ಮೆಹಂದಿ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಮಾಸ್ಕ್ ಇಲ್ಲದೆ 7 ಮಂದಿ ಭಾಗವಹಿಸಿದ್ದರು. ಇದೀಗ ಅವರ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಕುಂದಾಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಸ್ಥಳದಲ್ಲಿ ಇದ್ದ ಕೆಲವೊಂದು ಮಂದಿ ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕಂಡುಬಂದಿದೆ.
ಈ ಸಂಬಂದ ಮನೆಯವರಾದ ಭುಜಂಗ ಶೆಟ್ಟಿ ಮತ್ತು ಇತರ 7 ಮಂದಿಯ ಮೇಲೆ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ರಾಘವೇಂದ್ರ ವರ್ಣೇಕರ್ ಅವರು ನೀಡಿರುವ ದೂರಿನ ಅನ್ವಯ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಹಂದಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ:
ಇನ್ನು ಜಿಲ್ಲೆಯಲ್ಲಿ ಯಾವುದೇ ಮೆಹಂದಿ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ಕಲ್ಪಿಸಿಲ್ಲ. ಒಂದೊಮ್ಮೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಫೋಟೋ, ವೀಡಿಯೋಗ್ರಾಫರ್ ಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.