ಮಂಗಳೂರು, ಮೇ 29 (DaijiworldNews/MS):ನಗರದಾದ್ಯಂತ ಶನಿವಾರ ಮುಂಜಾನೆ ಭಾರೀ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಮಳೆಯಿಂದಾಗಿ ನಗರದ ಪಂಪ್ ವೆಲ್ ಬಳಿಯ ಸರ್ವೀಸ್ ರಸ್ತೆ, ಪಡೀಲ್ ಅಂಡರ್ ಪಾಸ್, ಕೊಟ್ಟಾರ ಚೌಕಿ ಸೇರಿದಂತೆ ತಗ್ಗು ಪ್ರದೇಶದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ರಾಜಕಾಲುವೆಗಳಲ್ಲಿಯೂ ನೀರು ಉಕ್ಕಿ ಹರಿದಿದೆ.
ಸಾಮಾನ್ಯವಾಗಿ ಮಾರ್ಚ್ನಿಂದ ಮೇ ಅಂತ್ಯದವರೆಗಿನ ಅವಧಿಯನ್ನು ಪೂರ್ವ ಮುಂಗಾರು ಅವಧಿ ಎನ್ನಲಾಗುತ್ತದೆ. ಆದರೆ ತೌಕ್ತೇ ಚಂಡಮಾರುತ ಹಿನ್ನಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಉತ್ತಮ ಮಳೆಯಾಗಿತ್ತು. ಇದೀಗ ಪೂರ್ವ ಮುಂಗಾರು ಚುರುಕುಗೊಂಡಿದ್ದು ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ.
ಮುಂಗಾರು ಮಳೆ ಸುರಿಸುವ ನೈಋುತ್ಯ ಮಾನ್ಸೂನ್ ಮಾರುತಗಳು ಮೇ 31ರಂದು ಕೇರಳ ಪ್ರವೇಶಿಸಲಿದ್ದು, ಜೂ.5 ರ ಬಳಿಕ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.