ಬೈಂದೂರು,ಜೂ 02 (DaijiworldNews/MS): ಕೋವಿಡ್-19 ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಗಳು ತಂಡವಾಗಿ ನಮ್ಮ ಗ್ರಾಮ ಪಂಚಾಯಿತಿ, ನಮ್ಮ ವಾರ್ಡ್ ಕೊರೋನಾ ಮುಕ್ತವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದನ್ನು ನೋಡಿದರೆ ನಮ್ಮೆರಡು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಕೆಲವೇ ದಿನಗಳಲ್ಲಿ ಕೊರೋನಾ ಮುಕ್ತವಾಗುವುದು ನಿಶ್ಚಯ ಎಂದು ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಬೈಂದೂರು ಪಟ್ಟಣ ಪಂಚಾಯತ್ಗೆ ಭೇಟಿ ನೀಡಿ ಕೊರೋನಾ ನಿಯಂತ್ರಣದ ಬಗ್ಗೆ ಚರ್ಚಿಸಿದರು.
ಕೊರೋನಾ ಉಚ್ಚಾಟನೆ ಮಾಡಲು ಮೂಲಭೂತ ಶಕ್ತಿ ಎಂದರೆ ಗ್ರಾಮ ಮಟ್ಟದ ಕಾರ್ಯಪಡೆ. ನನಗೆ ವಿಶ್ವಾಸವಿದೆ ಕೊರೋನಾ ನಿಯಂತ್ರಣಕ್ಕೆ ಬರಲಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ನಗರಾಡಳಿತ, ಗ್ರಾಮ ಪಂಚಾಯತ್ ಕಾರ್ಯಪಡೆಯ ಜೊತೆ ಚರ್ಚಿಸಲಾಗಿದೆ ಎಂದರು.
ಕೊರೋನಾ ನಿಯಂತ್ರಣದಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ತಂಡವಾಗಿ ಕೆಲಸ ಮಾಡುತ್ತಿದೆ. ಈ ನಡುವೆ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ಕೂಡಾ ಕೇಳಿ ಬಂದಿವೆ. ಸಮಸ್ಯೆಗಳನ್ನು ಸರ್ಕಾರ ಪರಿಹರಿಸಲಿದೆ ಎಂದರು.
ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ವೈದ್ಯಾಧಿಕಾರಿಗಳಾದ ಡಾ|ನಂದಿನಿ, ಡಾ|ಸಹನಾ, ತಾ.ಪಂ. ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಬಾಬು ಶೆಟ್ಟಿ, ಸದಾಶಿವ ಪಡುವರಿ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು. ಬಳಿಕ ಸಚಿವರು ನಾವುಂದ, ಮರವಂತೆ, ನಾಡ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.