ಕುಂದಾಪುರ, ಜೂ.03 (DaijiworldNews/HR): ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ತೊಂದರೆಯಾಗುವುದು, ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು, ನೀರು ನಿಲ್ಲುವುದನ್ನು ಕೂಡಲೇ ಸರಿಪಡಿಸುವಂತೆ ನವಯುಗ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಕೆ.ರಾಜು ಸೂಚನೆ ನೀಡಿದ್ದಾರೆ.
ಅವರು ಗುರುವಾರ ಕುಂದಾಪುರದಲ್ಲಿ ಹೆದ್ದಾರಿ ಕಾಮಗಾರಿ ನಡೆದಿರುವ ಪ್ರದೇಶಗಳನ್ನು ಪರಿಶೀಲಿಸಿದರು. ಎಲ್ಲೆಲ್ಲಿ ನೀರು ನಿಲ್ಲುತ್ತದೆ. ಚರಂಡಿ ಸರಿಯಾಗಿ ಇಲ್ಲದಿರುವುದು, ಮಳೆಗಾಲದಲ್ಲಿ ಸಮಸ್ಯೆಯಾಗುವುದನ್ನು ಜೊತೆಗಿದ್ದ ಹೆದ್ದಾರಿ ಕಾಮಗಾರಿ ನಿರ್ವಹಿಸಿದ ಕಂಪೆನಿಯ ಅಧಿಕಾರಿಗಳಿಗೆ ತಿಳಿಸಿದರು. ಸಮಸ್ಯೆಗಳನ್ನು ಸರಿಪಡಿಸದೇ ಇದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಆನಂದಪ್ಪ ನಾಯಕ್, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ, ಕಂದಾಯ ಪರಿವೀಕ್ಷಕ ದಿನೇಶ್, ಐಆರ್ಬಿ ಅಧಿಕಾರಿಗಳಾದ ಪ್ರಪುಲ್ಲ ಕಾಕಡೆ, ಬೋಜ್ ಕಾಂತ್ ಉಪಸ್ಥಿತರಿದ್ದರು.