ಮಂಗಳೂರು, ಜೂ 15 (DaijiworldNews/PY): ಭಾರಿ ಮಳೆಯ ಪರಿಣಾಮ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ರಸ್ತೆ ಸಾರಿಗೆಯ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆ ಬಿರುಕು ಬಿಟ್ಟಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿದಂತೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಮಿಥುನ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಶಶಿಕುಮಾರ್, "ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕ ಕಲ್ಪಿಸುವ ಫಲ್ಗುಣಿ ನದಿ ಸೇತುವೆ ಕುಸಿದಿದೆ. ಹಾಗಾಗಿ ಸದ್ಯ ರಸ್ತೆ ಸಂಚಾರ ಸೂಕ್ತವಲ್ಲದ ಕಾರಣ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಉಡುಪಿ ಕಡೆಯಿಂದ ವಿಮಾನ ನಿಲ್ದಾಣಕ್ಕೆ ಬರುವವರು ಮೂಲಕ, ಕಿನ್ನಿಗೋಳಿ, ಕಟೀಲು, ಬಜ್ಪೆ ಮೂಲಕ ಬರಬಹುದು. ಕಾಸರಗೋಡು, ಮಂಗಳೂರಿನಿಂದ ವಿಮಾನ ನಿಲ್ದಾಣಕ್ಕೆ ಬರುವವರು ನಂತೂರು, ವಾಮಂಜೂರು, ಗುರುಪುರ, ಕೈಕಂಬ, ಬಜ್ಪೆ ರಸ್ತೆಯಲ್ಲಿ ಬರಬಹುದು" ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ನಳಿನ್, "ಸೇತುವೆಯ ದುರಸ್ತಿ ಕಾರ್ಯ ಕೈಗೊಳ್ಳಲು ಪ್ರಯತ್ನಿಸಲಾಗುವುದು" ಎಂದು ಹೇಳಿದ್ದಾರೆ.