ಮಂಗಳೂರು, ಜೂ 16 (DaijiworldNews/MS): ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರವೂ ಇಂಧನ ಮತ್ತು ವಿದ್ಯುತ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಈ ಬಗ್ಗೆ ಜೂನ್ 16 ರ ಬುಧವಾರ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ‘ಕರೋನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇದರಿಂದ ರಾಜ್ಯದ ಜನತೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಇಂಧನ ಬೆಲೆ 19 ಪಟ್ಟು ಹೆಚ್ಚಾಗಿದೆ. ಮೋದಿ ವಿರೋಧ ಪಕ್ಷದಲ್ಲಿದ್ದಾಗ ಅಧಿಕಾರಕ್ಕೆ ಬಂದ ತಕ್ಷಣವೇ 70 ರೂ. ಇದ್ದ ಪೆಟ್ರೋಲ್ ಬೆಲೆ ಇಳಿಸುವುದಾಗಿ ಹೇಳಿ ದ್ದರು. ಆದರೆ ಕಳೆದೊಂದು ವರ್ಷದಲ್ಲಿ ಲೀ. ಗೆ 30 ರೂ. ಏರಿಕೆ ಮಾಡಿದ್ದಾರೆ. ವಿದ್ಯುತ್ ಒಂದು ಯುನಿಟ್ಗೆ 30 ಪೈಸೆ ಏರಿಸಿದ್ದಾರೆ. ಇದಕ್ಕೂ ಸಕಾರಣವಿಲ್ಲ. ರಾಜ್ಯದಲ್ಲಿ 30000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇಲ್ಲಿ ಜನರಿಗೆ ಬೇಕಿರುವುದು 10000 ಯುನಿಟ್ ಮಾತ್ರ. ಅದಾನಿ ಕಂಪೆನಿ ಕೂಡ ಉತ್ಪಾದನೆ ಮಾಡುತ್ತಿದೆ. ಅವರಿಂದ ಕೇಂದ್ರ ಹೆಚ್ಚುವರಿ ಹಣ ಕೊಟ್ಟು ವಿದ್ಯುತ್ ಖರೀದಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಸರಬರಾಜು ಕಂಪನಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿತ್ತು. ಹೀಗಾಗಿ ತಕ್ಷಣ ಅವೈಜ್ಞಾನಿಕವಾದ ವಿದ್ಯುತ್ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ವಿರೋಧ ಪಕ್ಷದ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.
ಮಾಜಿ ಶಾಸಕ ಜೆ ಆರ್ ಲೋಬೊ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಶಶಿಧರ್ ಹೆಗ್ಡೆ, ಲಾರೆನ್ಸ್, ಭಾಸ್ಕರ್ ಮೊಯಿಲಿ, ಅಪ್ಪಿ, ಸಾಹುಲ್ ಹಮೀದ್ ಮತ್ತು ಇತರರು ಉಪಸ್ಥಿತರಿದ್ದರು.