ಕುಂದಾಪುರ, ಜೂ 18 (DaijiworldNews/PY): "ಕೊರೊನಾ ನಿಯಂತ್ರಣಕ್ಕೆ ಜನರಿಗೆ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರವೂ ಮಹತ್ವದ್ದಾಗಿದೆ. ವಸ್ತುನಿಷ್ಠ ವರದಿಯ ಮೂಲಕ ಕಾಲಕಾಲಕ್ಕೆ ಎಚ್ಚರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿ ಪತ್ರಕರ್ತರಿಗೆ ನೈತಿಕ ಧೈರ್ಯ ತುಂಬುವ ಉದ್ದೇಶದಿಂದ ಅವರ ಜೊತೆ ನಾವಿದ್ದೇವೆ ಎನ್ನುವ ನೆಲೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಆಹಾರದ ಕಿಟ್ ನೀಡಲಾಗುತ್ತಿದೆ" ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ರಾಜು ಪೂಜಾರಿ ಅಭಿಪ್ರಾಯಪಟ್ಟರು.
ಅವರು ಜೂ.18ರಂದು ಕುಂದಾಪುರದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಾಖೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಕೊಡಮಾಡಲಾದ ಆಹಾರ ಕಿಟ್ ವಿತರಿಸಿ ಮಾತನಾಡಿದರು.
"ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಹಾರ ಕಿಟ್ ನೀಡಿದ್ದು ಬ್ಯಾಂಕ್ನ ಅಧ್ಯಕ್ಷರು, ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ" ಎಂದರು.
"ಪತ್ರಕರ್ತರಿಗೆ ಲಸಿಕೆ ನೀಡುವಲ್ಲಿ ಸಂಘ ಯಶಸ್ವಿಯಾಗಿದೆ. ಕುಂದಾಪುರದಲ್ಲಿ ಪತ್ರಿಕಾ ಭವನದ ಬೇಡಿಕೆಯೂ ಇದ್ದು ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ. ಕೊರೋನಾ ಲಾಕ್ಡೌನ್ನಿಂದಾಗಿ ಸಾಕಷ್ಟು ಪತ್ರಕರ್ತರು ಸಂಕಷ್ಟದಲ್ಲಿದ್ದು ಪತ್ರಕರ್ತರಿಗೆ ನೆರವಾಗಲು ಸಂಘ ಶ್ರಮಿಸುತ್ತಿದೆ" ಎಂದು ಅವರು ಹೇಳಿದರು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಮಾತನಾಡಿ, "ಕೊರೊನಾ 1ನೇ ಅಲೆಯ ಸಂದರ್ಭದಲ್ಲಿಯೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪತ್ರಕರ್ತರಿಗೆ ಆಹಾರ ಸಾಮಗ್ರಿ ಕಿಟ್ ಒದಗಿಸಿದೆ. ಈ ವರ್ಷವೂ ಪತ್ರಕರ್ತರಿಗೆ ಸ್ಪಂದಿಸಿದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ಗೆ ಅಭಿನಂದನೆ ಸಲ್ಲಿಸುತ್ತೇನೆ" ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯ ಪಾಯಸ್, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ ಉಪಸ್ಥಿತರಿದ್ದರು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಕುಂದಾಪುರ ಶಾಖೆಯ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಉಡುಪಿ ಜಿಲ್ಲಾ ಸಂಘದ ಸದಸ್ಯರಾಗಿರುವ ರಾಜ್ಯ ಸಂಘದ ಗುರುತು ಚೀಟಿ ಹೊಂದಿರುವ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಯಿತು.