ಮಂಗಳೂರು, ಜೂ. 19 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ, ಆದರೆ ಕೊರೊನಾ ಪಾಸಿಟಿವಿಟಿ ದರದಲ್ಲಿ ಹೆಚ್ಚಳವಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.
ಈ ಕುರಿತು ಯುನಿವರ್ಸಿಟಿ ಕಾಲೇಜಿನಲ್ಲಿ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, "ದ.ಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾಗುತ್ತಿದೆ ಎಂಬ ಆತಂಕ ಸಾರ್ವಜನಿಕರಿಗೆ ಬೇಡ. ಶುಕ್ರವಾರ ಸುಮಾರು 11 ಸಾವಿರ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿದ್ದರಿಂದ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಆದರೆ ಪಾಸಿಟಿವಿಟಿ ದರದಲ್ಲಿ ಹೆಚ್ಚಳವಾಗಿಲ್ಲ. ಕಳೆದ ವಾರ ಶೇ.18ರಷ್ಟಿದ್ದ ಪಾಸಿಟಿವಿಟಿ ದರ ಈಗ ಶೇ.9ಕ್ಕೆ ಇಳಿಕೆಯಾಗಿದೆ" ಎಂದಿದ್ದಾರೆ.
ಇನ್ನು "ಕೊರೊನಾ ಲಸಿಕೆಗಳನ್ನು ಪಡೆಯುವುದಕ್ಕೆ ಹೊರಬರಲಾಗದವರು ಒಂದು ಪ್ರದೇಶದಲ್ಲಿ 10ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಅವರಿಗೆ ಈ ಸಂಚಾರಿ ಲಸಿಕಾ ಕೇಂದ್ರದ ಮೂಲಕ ಹಂತ ಹಂತವಾಗಿ ಲಸಿಕೆ ನೀಡಲಾಗುತ್ತದೆ" ಎಂದರು.
ಅನ್ಲಾಕ್ ಕುರಿತು ಮಾಹಿತಿ ನೀಡಿದ ಅವರು, ಅನ್ಲಾಕ್ ಮಾಡಬೇಕಾದರೆ ಜನರ ಸಹಕಾರ ಮುಖ್ಯ. ಇಂದು ಜನಪ್ರತಿನಿಧಿಗಳು ಮತ್ತು ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುತ್ತಿದ್ದು, ಆ ಬಳಿಕ ಅನ್ಲಾಕ್ ಬಗ್ಗೆ ನಿರ್ಧಾರ ಮಾಡಲಾಗುವುದು" ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಛೇರ್ಮನ್ ಸಿ ಎ ಶಾಂತಾರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮಾ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಏಶಿಯನ್ ಪತ್ರಕರ್ತರ ಒಕ್ಕೂಟದ ಸಂಚಾಲಕ ಮದನ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಬ್ಯಾಂಕ್ ಆ ಬರೋಡ ಮಹಾ ಪ್ರಭಂಧಕಿ ಗಾಯತ್ರಿ ಆರ್, ರೋಟರಿ ಕ್ಲಬ್ ಅಧ್ಯಕ್ಷ ಆರ್ಚಿಬಾಲ್ಡ್ ಮೆನೆಜ್ಸ್, ಯತೀಶ್ ಬೈಕಂಪಾಡಿ, ನಿತ್ಯಾನಂದ ಶೆಟ್ಟಿ, ತುಷಾರ್ ಸುರತ್ಕಲ್ ಉಪಸ್ಥಿತರಿದ್ದರು.