ಮಂಗಳೂರು, ಜೂ. 19 (DaijiworldNews/HR): ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಟ್ಯಾಕ್ಸಿ ಚಾಲಕರಿಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಶನಿವಾರ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅಭಿಯಾನವನ್ನು ಉದ್ಘಾಟಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಅಶಕ್ತ ವ್ಯಕ್ತಿಗಳಿಗೆ ಅವರ ಸೂರಿಗೆ ತೆರಳಿ ಲಸಿಕೆ ನೀಡುವ ವಿನೂತನ ಅಭಿಯಾನಕ್ಕೂ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಆರೋಗ್ಯ ಇಲಾಖೆಯ ಪ್ರಮುಖರು ಉಪಸ್ಥಿತರಿದ್ದರು.