ಉಡುಪಿ, ಜೂ 23 (DaijiworldNews/PY): "ಎರಡನೇ ಕೊರೊನಾ ಅಲೆಯು ದೇಶಾದ್ಯಂತ ಬಹಳಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ದೇಶದ ವಿವಿಧ ಸ್ಥರದ ನಾಗರೀಕರು ವಿವಿಧ ರೀತಿಯಲ್ಲಿ ಸಮಸ್ಯೆಗೀಡಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಬಹಳಷ್ಟು ಹೊಡೆತ ಬಿದ್ದಿದೆ. ವಿದ್ಯಾರ್ಥಿಗಳು ಶಿಕ್ಷಕರು, ಸರಕಾರದ ಅವೈಜ್ಞಾನಿಕ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಸರಕಾರ ಮತ್ತು ಖಾಸಗಿ ಶಾಲಾ ಆಡಳಿತ ಮಂಡಳಿಯ ನಡುವಿನ ಸಮನ್ವಯದ ಕೊರತೆಯಿಂದಾಗಿ ಶಾಲಾ ಶಿಕ್ಷಕರು ಸೂಕ್ತ ಸಮಯಕ್ಕೆ ಸಂಬಳ ಸಿಗದೆ ಕಂಗಾಲಾಗಿದ್ದಾರೆ. ಸರಕಾರ ತಕ್ಷಣವೇ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು" ಎಂದು ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್ಐಓ ಕ್ಯಾಂಪಸ್ ಕಾರ್ಯದರ್ಶಿ ಡಾ. ಫಹೀಮ್ ಹೂಡೆ, "ವಿದ್ಯಾರ್ಥಿಗಳು ಶೈಕ್ಷಣಿಕ ಪಠ್ಯ ಕ್ರಮದಿಂದಲೂ ವಂಚಿತರಾಗುತ್ತಿದ್ದಾರೆ. ಸರಕಾರ ಆನ್ ಲೈನ್ ಶಿಕ್ಷಣವನ್ನು ಆರಂಭಿಸಿದರು ಸೂಕ್ತ ವ್ಯವಸ್ಥೆಯಿಲ್ಲದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳು ಶೈಕ್ಷಣಿಕ ಚಟುವಟಿಕೆಗಳನ್ನು ತೊರೆದು ಬಾಲ ಕಾರ್ಮಿಕದಂತಹ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇನ್ನೂ ಮನೆಯಲ್ಲಿ ಇರುವ ವಿದ್ಯಾರ್ಥಿಗಳು ಬಹಳಷ್ಟು ಮಾನಸಿಕ ಒತ್ತಡಕ್ಕೂ ತುತ್ತಾಗುತ್ತಿದ್ದಾರೆ. ಇಂತಹ ಸಂಧಿಗ್ದ ಪರಿಸ್ಥಿತಿಯಲ್ಲಿ ಸರಕಾರ ಮಧ್ಯ ಪ್ರವೇಶಿಸಬೇಕು" ಎಂದು ಆಗ್ರಹಿಸಿದರು.
"ಖಾಸಗಿ ಶಾಲೆಗಳು ಶಿಕ್ಷಕರಿಗೆ ಸಂಬಳ ಕೊಡದೆಯಿರುವ ಈ ಸಂದರ್ಭದಲ್ಲಿ ಸರಕಾರ ಸೂಕ್ತ ಪರಿಹಾರವನ್ನು ಪ್ರತಿ ತಿಂಗಳು ನೀಡಬೇಕು. ಕೆಲವು ಖಾಸಗಿ ಶಾಲೆಗಳು ಕೊರೊನಾದಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕೆಲಸದಿಂದ ವಜಾ ಗೊಳಿಸುವಂತಹ ಅಮಾನವೀಯ ಕೆಲಸಗಳನ್ನು ಮಾಡುತ್ತಿದ್ದು ಸರಕಾರ ಮಧ್ಯ ಪ್ರವೇಶಿಸಿ ಇದನ್ನು ಕೂಡಲೇ ನಿಲ್ಲಿಸಬೇಕು. ಸರಕಾರ ಆನ್ ಲೈನ್ ಶಿಕ್ಷಣ ಆರಂಭಿಸುವ ಮುನ್ನ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣಕ್ಕೆ ಬೇಕಾಗಿರುವ ಮೊಬೈಲ್ ಮತ್ತು ನೆಟ್ವರ್ಕ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಸರಕಾರ ಶಾಲಾ ಮಕ್ಕಳಿಗೆ ಒದಗಿಸುವ ಪಠ್ಯ ಪುಸ್ತಗಳನ್ನು ಸೂಕ್ತ ಸಮಯಕ್ಕೆ ಒದಗಿಸಬೇಕು. ಕೊರೊನಾ ಸಂದರ್ಭದಲ್ಲಿ ಹಲವು ಮಕ್ಕಳು, ಮುಖ್ಯವಾಗಿ ವಲಸೆ ಕಾರ್ಮಿಕರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸರಕಾರ ಈ ಬಗ್ಗೆ ಸರ್ವೆ ನಡೆಸಿ ಒಂದು ಮಗುವು ಕೂಡ ಶಿಕ್ಷಣ ವಂಚಿತರಾಗದಂದತೆ ಕ್ರಮವಹಿಸಬೇಕು" ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್ಐಓ ಉಡುಪಿ ಜಿಲ್ಲಾಧ್ಯಕ್ಷ ಅರ್ಬಾಝ್ ಅಹಮದ್ ಅಫ್ವಾನ್ ಬಿ ಹೂಡೆ, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ, ಉಡುಪಿ ಜಿಲ್ಲೆ ಅಯಾನ್ ಮಲ್ಪೆ, ವಸೀಮ್ ಗುಜ್ಜರಬೆಟ್ಟು ಉಪಸ್ಥಿತರಿದ್ದರು.