ಉಡುಪಿ, ಜೂ. 24 (DaijiworldNews/SM): ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ರೋಗಿಗಳು ಮತ್ತು ಅವರ ಸಹಾಯಕರಿಗೆ ಮತ್ತು ವ್ಯಾಕ್ಸಿನೇಷನ್ ಪಡೆದುಕೊಳ್ಳಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು ಮಾಂಸದ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಲಾಗಿದೆ.
ಮದ್ಯದಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನು ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿದೆ. ಬಸ್, ರೈಲು ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ರೈಲ್ವೆ, ಬಸ್, ವಿಮಾನ ನಿಲ್ದಾಣದಿಂದ ಟ್ಯಾಕ್ಸಿ ಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಯಾಣಿಸಬಹುದಾಗಿದೆ.
ಈಗಾಗಲೇ ನಿಗದಿಯಾದ ಮದುವೆಗೆ 40 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಶವಸಂಸ್ಕಾರಕ್ಕೆ ಕೇವಲ 5 ಮಂದಿಗೆ ಅವಕಾಶ ನೀಡಲಾಗಿದೆ.
ಇನ್ನು ಪಾನಿಪುರಿ, ಚಾಟ್ಸ್ ಅಂಗಡಿಗಳಿಗೆ ಅವಕಾಶ ನೀಡಲಾಗಿಲ್ಲ.