ಮಂಗಳೂರು, ಜೂ 28 (DaijiworldNews/PY): "ಜಿಲ್ಲಾಡಳಿತದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ" ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಅಪರ ಜಿಲ್ಲಾಧಿಕಾರಿಗಳೊಂದಿಗೆ ನಗರದ ಅಲೋಶಿಯಸ್ ಹಾಗೂ ರಾಮಕೃಷ್ಣ ಕಾಲೇಜಿನ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಶಾಸಕ ಕಾಮತ್, "ಅಲೋಶಿಯಸ್ ಕಾಲೇಜಿಗೆ ಜಿಲ್ಲಾಡಳಿತದಿಂದ 1 ಸಾವಿರ ಲಸಿಕೆ ನೀಡಲಾಗಿದೆ. ಹಾಗೆಯೇ ರಾಮಕೃಷ್ಣ ಕಾಲೇಜಿಗೆ 200 ಲಸಿಕೆ ನೀಡಲಾಗಿದೆ. ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಲೇಜುಗಳಲ್ಲೇ ಲಸಿಕೆ ವಿತರಣೆಗೆ ಅವಕಾಶ ನೀಡಲಾಗಿದೆ. ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೊರೊನಾ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ" ಎಂದು ಹೇಳಿದರು.
"ಜಿಲ್ಲೆಯ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ನೀಡಲು ಸರಕಾರ ಹಾಗೂ ಜಿಲ್ಲಾಡಳಿತ ಬದ್ಧವಾಗಿದೆ. ಅನಗತ್ಯ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಲಸಿಕೆ ವಿತರಣೆಯ ಕುರಿತು ರಾಜ್ಯ ಸರಕಾರ ವಿಶೇಷ ಮುತುವರ್ಜಿ ವಹಿಸಿದೆ. ಜನರು ಆತಂಕಪಡುವ ಅವಶ್ಯಕತೆಯಿಲ್ಲ" ಎಂದು ಶಾಸಕ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಸಂತ್ ಜೆ ಪೂಜಾರಿ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.