ಮಂಗಳೂರು, ಜೂ. 28 (DaijiworldNews/SM): ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ ಪೋಸ್ಟ್ನಲ್ಲಿ ಕೋವಿಡ್ ನೆಗೆಟಿವ್ ವರದಿ ಹೊಂದಿ ಪ್ರವೇಶಿಸುತ್ತಿರುವ ಬಗ್ಗೆ ನಡೆಯುತ್ತಿರುವ ತಪಾಸಣೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಉಪ ವಿಭಾಗಾಧಿಕಾರಿ ಮಧನ್ ಮೋಹನ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿಗಳು, ಪಿ.ಡಿ.ಓ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ರಾಜ್ಯ ಸರ್ಕಾರ ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋರೋನಾ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವ ಹಾಗೂ ಡೆಲ್ಟಾ ಪ್ಲಸ್ ವೈರಸ್ ಕಂಡು ಬರುತ್ತಿರುವ ಹಿನ್ನೆಲೆ ಗಡಿ ಭಾಗದಿಂದ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ಆದೇಶಿಸಿರುತ್ತಾರೆ ಈ ಹಿನ್ನಲೆ ಗಡಿ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದರು.
ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಎಲ್ಲಾ ಚೆಕ್ ಪೋಸ್ಟ್ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಗಡಿ ಮೂಲಕ ಪ್ರವೇಶಿಸುವವರ ಕೋವಿಡ್ ನೆಗೆಟಿವ್ ವರದಿಯನ್ನು ಚೆಕ್ ಪೊಸ್ಟ್ಗಳಲ್ಲಿ ತಪಾಸಣೆ ವೇಳೆಯಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಲಿದ್ದಾರೆ, ಜಿಲ್ಲೆಗೆ ಪ್ರವೇಶಿಸುವ ಪ್ರತಿಯೊಬ್ಬ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿ ಪ್ರವೇಶಿಸುವುದು ಕಡ್ಡಾಯ ಎಂದರು.