ಮಂಗಳೂರು, ಜೂ. 30(DaijiworldNews/SM): ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಚಿಕಿತ್ಸೆ ನೀಡುವುದರೊಂದಿಗೆ ಪ್ರತಿಯೊಬ್ಬರ ಆರೋಗ್ಯ ಸುಧಾರಣೆಯಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕೆಂಬ ಆಶಯವನ್ನು ಸರ್ಕಾರ ಹೊಂದಿದೆ. ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆ ಸೋಂಕಿನ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದರು.
ಸುಮಾರು 1.37 ಕೋಟಿ ರೂ.ವೆಚ್ಚದಲ್ಲಿ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ರಾಜ್ಯ ಸರಕಾರ ಒತ್ತು ನೀಡಿದೆ ಎಂದರು. ಕೊರೋನ ಸೋಂಕು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿದ್ದೂ, ವೈರಾಣು ಪ್ರಯೋಗಾಲಯ ಸ್ಥಾಪಿಸಿದ್ದಲ್ಲಿ ವೈರಾಣುಗಳ ಸ್ವರೂಪ, ಸ್ವಭಾವದಲ್ಲಿನ ಬದಲಾವಣೆಗಳ ಬಗ್ಗೆ ಕೂಲಂಕಷವಾಗಿ ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ ಎಂದರು.
ತಾಲೂಕು ವ್ಯಾಪ್ತಿಯಲ್ಲಿ ಹೊಸ ಮಾದರಿಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಕೂಡ ಆರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಚಿಕಿತ್ಸೆ ಸೇರಿದಂತೆ ಪ್ರತಿಯೊಬ್ಬರಿಗೂ ಸೂಕ್ತವಾದ ಆರೋಗ್ಯ ವ್ಯವಸ್ಥೆ ನೀಡಲು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವುದು ಸರಕಾರದ ಮೂಲ ಉದ್ದೇಶವಾಗಿದೆ ಎಂದರು.
ರಾಜ್ಯದಲ್ಲಿ ಈ ಮೊದಲು ವೈದ್ಯರ ಕೊರತೆ ಇತ್ತು. ವೈದ್ಯರು, ತಜ್ಞ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ.80ರಷ್ಟು ವೈದ್ಯರ ನೇಮಕಾತಿ ನಡೆದಿದೆ. ಬಹುತೇಕ ವೈದ್ಯರು ಹುದ್ದೆ ಅಲಂಕರಿಸಿದ್ದಾರೆ. ಜೊತೆಗೆ ಒಂದು ವರ್ಷದ ಮಟ್ಟಿಗೆ ಗುತ್ತಿಗೆ ಆಧಾರದಲ್ಲೂ ವೈದ್ಯ ಸಿಬ್ಬಂದಿ ನೇಮಿಸಲಾಗಿದೆಎಂದು ಹೇಳಿದರು.