ಕಾರ್ಕಳ, ಜು. 01(DaijiworldNews/HR): ಕೊರೊನಾ ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಕಳ ಕ್ಷೇತ್ರದ 15 ವರ್ಷದ ಒಳಗಿನ ಸುಮಾರು 40,000 ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ವಾತ್ಸಲ್ಯ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ರವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.
ಮಕ್ಕಳ ಆರೋಗ್ಯ ತಪಾಸಣೆಯ ಶಿಬಿರಗಳನ್ನು ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಸಲಾಗುತ್ತಿದ್ದು ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸಮನ್ವಯ ಸಾಧಿಸಿಕೊಂಡು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರ ಪಡೆದು ವಾತ್ಸಲ್ಯ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಯಶಸ್ವಿಗೊಳಿಸುವಂತೆ ಹಾಗೂ ಶಿಬಿರಕ್ಕೆ ಅವಶ್ಯವಿರುವ ಅಗತ್ಯ ಔಷಧಿ, ಪರಿಕರಗಳು ಮತ್ತು ಪೌಷ್ಠಿಕಾಂಶಯುಕ್ತ ಆಹಾರ ಸಾಮಾಗ್ರಿ ಕಿಟ್ಗಳನ್ನು ಒದಗಿಸುವ ಬಗ್ಗೆ ಪೂರ್ವ ತಯಾರಿ ನಡೆಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನೋಡಲ್ ಅಧಿಕಾರಿಯವರಾದ ಕುಂದಾಪುರ ಸಹಾಯಕ ಕಮಿಷನರ್ ಕೆ ರಾಜು, ಕಾರ್ಕಳ ತಹಶೀಲ್ದಾರ್ ಪುರಂದರ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಪುರಂದರ ಕೆ, ತಾಲೂಕು ವೈದ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಮಿತ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹರೀಶ್ ನಾಯಕ್ ಉಪಸ್ಥಿತರಿದ್ದರು.