ಉಡುಪಿ, ಜು. 05 (DaijiworldNews/SM): ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದಾಗ ನಮ್ಮ ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ ಆಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಹೊಸ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಹೂಡಿಕೆದಾರರು ಉತ್ಸುಕರಾಗಿದ್ದಾರೆ. ಕಾಪು ತಾಲೂಕಿನ ಮೂಳೂರು ಸಮೀಪ 250 ಎಕರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸಮೀಪದ ಬಳ್ಕುಂಜೆ ಎಂಬಲ್ಲಿ 800 ಎಕರೆ ಜಾಗವನ್ನು ಸ್ವಾಧೀನ ಪಡಿಸಲು ಪ್ರಸ್ತಾವನೆ ಬಂದಿದೆ. ಆದಷ್ಟು ಬೇಗ ಆ ಜಾಗವನ್ನು ಸ್ವಾಧೀನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಬೆಳಪು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಕೈಗಾರಿಕಾ ನೀತಿಯಲ್ಲಿ ತಿದ್ದುಪಡಿ ತಂದಿದ್ದೇವೆ. ಸಿಂಗಲ್ ವಿಂಡೋ ವ್ಯವಸ್ಥೆ, ಎಲ್ಲ ಇಲಾಖೆಯನ್ನು ಒಂದೇ ವ್ಯವಸ್ಥೆಯಡಿ ತರುವುದು, ಅಲೋಟ್ ಮೆಂಟ್ ಲೆಟರ್, ಕಾಮೆನ್ಸ್ ಮೆಂಟ್ ಸರ್ಟಿಫಿಕೇಟ್ ಬೇಗ ಸಿಗುವಂತೆ ಚಿಂತನೆ ನಡೆಸಲಾಗಿದೆ.
ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೈಗಾರಿಕೆ ಬೆಳವಣಿಗೆ ಆಗಬೇಕೆಂಬುದು ನಮ್ಮ ಗುರಿಯಾಗಿದೆ. ಆ ಗುರಿಯನ್ನು ಸಾಧಿಸಲು ಹೊಸ ಕೈಗಾರಿಕಾ ನೀತಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಕಳೆದ ಎರಡು ವರ್ಷಗಳಿಂದ ಬೆಂಗಳೂರು ಹೊರತು ಪಡಿಸಿ ಉಳಿದ ಕಡೆಗಳಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಮಂಗಳೂರು, ಯಾದಗಿರಿ, ಕೊಪ್ಪಳ, ಬೆಳಗಾವಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಲವು ಕಡೆಗಳಲ್ಲಿ ಕೈಗಾರಿಕೆ ಸ್ಥಾಪಿಸಲು ದೊಡ್ಡ ಪ್ರಮಾಣದಲ್ಲಿ ಹೂಡಿಕೆದಾರರು ಮುಂದೆ ಬರುತ್ತಿದ್ದಾರೆ ಎಂದರು.
ಹೊಸ ಕೈಗಾರಿಕಾ ನೀತಿಯಂತೆ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ ಒಪ್ಪಂದ ಪತ್ರದಲ್ಲಿ ಷರತ್ತು ವಿಧಿಸಲಾಗಿದೆ. ಅದೇ ರೀತಿ ಎಲ್ಲ ಕೈಗಾರಿಕೆಗಳಲ್ಲಿ ಪ್ರಮುಖ ಕೆಲಸಗಳನ್ನು ಕನ್ನಡಿಗರಿಗೆ ನೀಡಬೇಕು. ಕೆಲಸ ನೀಡದ ಬಗ್ಗೆ ದೂರು ಬಂದರೆ ತನಿಖೆ ನಡೆಸಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.