ಬೆಳ್ತಂಗಡಿ , ಜು 10 (DaijiworldNews/MS): ಚಾರ್ಮಾಡಿ ಚೆಕ್ ಪೋಸ್ಟಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಧರ್ಮಸ್ಥಳ ಪೊಲೀಸರು ವಾಹನ ಚಾಲಕ ಹಾಗೂ ಇನ್ನೋರ್ವ ನನ್ನು ಬಂಧಿಸಲಾಗಿದೆ. ಬಂಧಿತರಲ್ಲೊ ಓರ್ವನನ್ನು ವಾಹನ ಚಾಲಕ ಸುರೇಶ್ ಎಂದು ಗುರುತಿಸಲಾಗಿದೆ.
ಚಾರ್ಮಾಡಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಚಿಕ್ಕಮಗಳೂರು ಕಡೆಯಿಂದ ಬಂದ ಟಾಟಾ ಎಸಿ ವಾಹನವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಇದರಲ್ಲಿ 2 ಹೋರಿ ಹಾಗೂ ಒಂದು ದನವನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ . ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ಚಾಲಕನಲ್ಲಿ ಯಾವುದೇ ದಾಖಲೆಗಳಿರಲಿಲ್ಲ.
ಆರೋಪಿಗಳು ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವ ಕಾರ್ಯ ಮಾಡುತ್ತಿದ್ದರು ಎಂದು ಕರ್ನಾಟಕ ಗೋ ಹತ್ಯಾ ಪ್ರತಿಬಂಧಕ ಕಾಯ್ದೆಯ ಅಡಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.