ಮಂಗಳೂರು, ಜು.13 (DaijiworldNews/HR): ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯು ಕೇರಳದ ಗಡಿ ಭಾಗದಲ್ಲಿರುವುದರಿಂದ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು ಹೋಗುತ್ತಿರುವುದರಿಂದ ಜಿಲ್ಲೆಯಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
"ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕ ಸ್ಥಳ, ಧಾರ್ಮಿಕ ಕ್ಷೇತ್ರಗಳು, ಪ್ರೇಕ್ಷಣಾ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಸೊಳ್ಳೆ ಉತ್ಪತ್ತಿ ತಾಣಗಳ ನಿಯಂತ್ರಣ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುಬೇಕು. ಚರಂಡಿ, ರಸ್ತೆ, ತೆರೆದ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವುದು, ಘನತ್ಯಾಜ್ಯ ವಸ್ತುಗಳನ್ನು ಎಸೆಯವುದರಿಂದ ಅವುಗಳಲ್ಲಿ ನೀರು ಶೇಖರವಾಗಿ ಸೊಳ್ಳೆ ಬೆಳವಣಿಗೆಗೆ ಅವಕಾಶವಿರುತ್ತದೆ. ಇದರ ನಿವರಣಾ ಕ್ರಮದ ಭಾಗವಾಗಿ ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು" ಎಂದು ಸೀಚನೆ ನೀಡಿದ್ದಾರೆ.
ಇನ್ನು ಸಾರ್ವಜನಿಕರು ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಲು ಗ್ರಾಮ ಸಭೆಗಳಲ್ಲಿ ಸೂಚನೆ ನೀಡಬೇಕು. ಅಂಗಡಿ ಮುಂಗಟ್ಟುಗಳ ಬಳಿ ಇರುವ ತಂಪು ಪಾನೀಯಗಳ ಖಾಲಿ ಬಾಟಲಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು" ಎಂದು ತಿಳಿಸಿದ್ದಾರೆ.