ಕುಂದಾಪುರ, ಜು.15 (DaijiworldNews/HR): ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದ ಕುಂದಾಪುರ ತಾಲೂಕಿನ ಬಸ್ರೂರಿನ ಮಕ್ಕಿ ಮನೆ ಎಂಬಲ್ಲಿ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಮನೆಯೊಳಗಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಬುಧವಾರ ತಡರಾತ್ರಿ ನಡೆದಿದ್ದು ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಮತ್ತು ಬೃಹತ್ ಗಾತ್ರದ ಧೂಪದ ಮರ ಬಿದ್ದು ಮನೆ ಹಾನಿಯಾಗಿದೆ.
ಬಸ್ರೂರು ಮಕ್ಕಿಮನೆ ಗಣಪಯ್ಯ ಗಾಣಿಗರಿಗೆ ಸೇರಿದ ಮನೆ ಇದಾಗಿದ್ದು, ಇಬ್ಬರು ಗಾಯಗೊಂಡಿದ್ದು ಮನೆಯಲ್ಲಿ ಇದ್ದ ಮಕ್ಕಳಿಗೆ ಯಾವುದೇ ಅಪಾಯವಾಗದೆ ಅದೃಷ್ಟವಶಾತ್ ಪಾರಾಗಿದ್ದಾರೆ.
ಮನೆಯ ಗೋಡೆಗಳು ಕುಸಿದು ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಕುಸಿದಿದೆ. ಗಾಯಗೊಂಡಿರುವ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.